ಶ್ರೀರಂಗಪಟ್ಟಣ: ಇಲ್ಲಿಗೆ ಸಮೀಪದ ರೆಸಾರ್ಟ್ವೊಂದರಲ್ಲಿ, ಕೋವಿಡ್ ನಿಯಮ ಉಲ್ಲಂಘಿಸಿ ಚಿತ್ರೀಕರಣ ನಡೆಸುತ್ತಿದ್ದ ಧಾರಾವಾಹಿಯೊಂದರ ತಂಡದ ಮೇಲೆ ಶುಕ್ರವಾರ ರಾತ್ರಿ ಪೊಲೀಸರು ದಾಳಿ ಮಾಡಿ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರಿನ ಕಲಾವಿದರು ಹಾಗೂ ತಂತ್ರಜ್ಞರು ಧಾರಾವಾಹಿ ಚಿತ್ರೀಕರಣ ನಡೆಸುತ್ತಿದ್ದಾರೆ ಎಂಬ ಮಾಹಿತಿ ಆಧರಿಸಿ, ಪೊಲೀಸರು ಹಾಗೂ ಅಧಿಕಾರಿಗಳು ದಾಳಿ ನಡೆಸಿದರು. ನಿಯಮ ಉಲ್ಲಂಘಿಸಿ, ಚಿತ್ರೀಕರಣ ನಡೆಸಲು ಅವಕಾಶ ನೀಡಿದ್ದಕ್ಕೆ ರೆಸಾರ್ಟ್ ವ್ಯವಸ್ಥಾಪಕರನ್ನು ತರಾಟೆ ತೆಗೆದುಕೊಂಡರು.
ತಹಶೀಲ್ದಾರ್ ಎಂ.ವಿ. ರೂಪಾ ಸೂಚನೆ ಮೇರೆಗೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಧಾರಾವಾಹಿ ಚಿತ್ರೀಕರಣ ನಡೆಸುತ್ತಿದ್ದ ತಂಡದ ಮುಖ್ಯಸ್ಥರಿಗೆ ದಂಡವನ್ನೂ ವಿಧಿಸಲಾಗಿದೆ’ ಎಂದು ತಹಶೀಲ್ದಾರ್ ತಿಳಿಸಿದರು.