ಪಾಂಡವಪುರ: ಅಕ್ರಮ ಗಣಿಗಾರಿಕೆಯ ಕಲ್ಲು ಕ್ರಷರ್ ಮೇಲೆ ಡಿಢೀರ್ ದಾಳಿ ನಡೆಸಿದ ತಹಶೀಲ್ದಾರ್ ಅವರಿಗೆ ಅಡ್ಡಿಪಡಿಸಿದ ವ್ಯಕ್ತಿಯ ಮೇಲೆ ಗುರುವಾರ ಪ್ರಕರಣ ದಾಖಲಾಗಿದೆ.
ಬೇಬಿಬೆಟ್ಟದಲ್ಲಿ ಅಕ್ರಮ ಕಲ್ಲು ಕ್ರಷರ್ ನಡೆಯುತ್ತಿದೆ ಎಂಬ ಮಾಹಿತಿಯಿಂದಾಗಿ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಅವರ ಸೂಚನೆಯ ಮೇರೆಗೆ ತಹಶೀಲ್ದಾರ್ ಪ್ರಮೋದ್ ಎಲ್.ಪಾಟೀಲ್ ಅವರು ಬೇಬಿ ಬೆಟ್ಟದ ಕಲ್ಲು ಗಣಿಗಾರಿಕೆಗೆ ಸ್ಥಳಕ್ಕೆ ತೆರಳುತ್ತಿದ್ದರು. ಈ ವೇಳೆ ಲಾರಿಯೊಂದು ಕಲ್ಲು ಸಾಗಿಸುತ್ತಿತ್ತು.
ತಹಶೀಲ್ದಾರ್ ಪ್ರಮೋದ್ ಎಲ್.ಪಾಟೀಲ್ ಅವರು ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಸನ್ಮತಿ ಕ್ರಷರ್ ಮೇಲೆ ದಾಳಿ ಮಾಡಿದ್ದಾರೆ.
ಈ ವೇಳೆ ಸನ್ಮತಿ ಕ್ರಷರ್ ಮಾಲೀಕ ಜಯರಾಮ್ ಅವರ ಪುತ್ರ ಜಯಂತ್ ‘ನೀವು ಯಾರು ಇಲ್ಲಿಗೆ ಏಕೆ ಬಂದಿದ್ದೀರಿ? ಇಲ್ಲಿಂದ ಹೊರಟು ಹೋಗಿ’ ಎಂದು ತಹಶೀಲ್ದಾರ್ ಹೇಳಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ.
ತಹಶೀಲ್ದಾರ್ ಅವರ ಕರೆಯ ಮೇರೆಗೆ ಪೊಲೀಸರು ಸ್ಥಳಕ್ಕೆ ಬಂದಾಗ ಸನ್ಮತಿ ಕ್ರಷರ್ನ ಜಯಂತ್ ಪರಾರಿಯಾಗಿದ್ದಾನೆ. ಈ ಸಂಬಂಧ ತಹಶೀಲ್ದಾರ್ ನೀಡಿರುವ ದೂರನ್ನು ದಾಖಲಿಸಿಕೊಂಡಿರುವ ಪಟ್ಟಣದ ಪೊಲೀಸರು ಕ್ರಮಕೈಗೊಂಡಿದ್ದಾರೆ.