ಶ್ರೀರಂಗಪಟ್ಟಣ: ತಾಲ್ಲೂಕಿನ ಕೊಕ್ಕರೆಹುಂಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರವೀಂದ್ರ ಅವರನ್ನು ಕರ್ತವ್ಯ ಲೋಪದ ಆರೋಪದಲ್ಲಿ ಗುರುವಾರ ಅಮಾನತು ಮಾಡಿ, ಶಾಲೆಯ ಶಿಕ್ಷಕಿ ರೂಪಾ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ.
ಶಾಲೆಗೆ ಪದೇ ಪದೆ ಗೈರು, ಬಿಸಿಯೂಟ ನಿರ್ವಹಣೆಯಲ್ಲಿ ಲೋಪ, ಇಲಾಖೆಯ ಸೂಚನೆ ಉಲ್ಲಂಘನೆ ಹಿನ್ನೆಲೆಯಲ್ಲಿ ರವೀಂದ್ರ ಅವರನ್ನು ಅಮಾನತು ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್.ಅನಂತರಾಜು ತಿಳಿಸಿದ್ದಾರೆ.
ಸದ್ಯಕ್ಕೆ ರೂಪಾ ಅವರನ್ನು ವರ್ಗಾವಣೆ ಮಾಡಲಾಗಿದೆ. ನೋಟಿಸ್ಗೆ ಸಮರ್ಪಕ ಉತ್ತರ ನೀಡದಿದ್ದರೆ ಅವರ ವಿರುದ್ಧವೂ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಅನಂತರಾಜು ತಿಳಿಸಿದ್ದಾರೆ.
ಶಾಲೆಯ ಶಿಕ್ಷಕ ರವೀಂದ್ರ ಮತ್ತು ಶಿಕ್ಷಕಿ ರೂಪಾ ಅವರ ನಡುವೆ ವೈಮನಸ್ಸು ಇರುವ ಕಾರಣ ಪಾಠ ಪ್ರವಚನ ನಡೆಯುತ್ತಿಲ್ಲ. ಇರುವ 16 ಮಕ್ಕಳಿಗೆ ಬಿಸಿಯೂಟವನ್ನು ಸರಿಯಾಗಿ ನೀಡುತ್ತಿಲ್ಲ ಎಂದು ಗ್ರಾಮಸ್ಥರು ಬುಧವಾರ ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ್ದರು.
ಗುರುವಾರ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದ ಬಿಇಒ ಅನಂತರಾಜು, ಕೊಕ್ಕರೆಹುಂಡಿ ಶಾಲೆಗೆ ಬೇರೆ ಶಿಕ್ಷಕರನ್ನು ಗುರುವಾರದಿಂದಲೇ ನಿಯೋಜನೆ ಮಾಡಲಾಗಿದೆ ಎಂದು ಹೇಳಿದ್ದಾರೆ.