ನಾಗಮಂಗಲ: ‘ಕಾಲೇಜಿಗೆ ಅಗತ್ಯವಾದ ಮೂಲ ಸೌಕರ್ಯ ಒದಗಿಸುವ ಮೂಲಕ ಉತ್ತಮ ಕಲಿಕಾ ವಾತಾವರಣವನ್ನು ನಿರ್ಮಿಸುವ ಜತೆಗೆ ಮುಂದಿನ ಐದು ವರ್ಷಗಳಲ್ಲಿ ಕಾಲೇಜಿನ ಅಭಿವೃದ್ಧಿಯ ಚಿತ್ರಣವೇ ಬದಲಾಗುವಂತೆ ಕ್ರಮವಹಿಸುತ್ತೇನೆ’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರೌಢಶಾಲಾ ಮತ್ತು ಕಾಲೇಜಿನ ಅಮೃತ ಮತ್ತು ಸುವರ್ಣ ಮಹೋತ್ಸವದ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
‘ನಾನು ಶಾಸಕನಾಗಿದ್ದಾಗ ಮೇಲಂತಸ್ತಿನ ಕಟ್ಟಡವನ್ನು ನಿರ್ಮಾಣ ಮಾಡಿಸಿದ್ದೆ. ನಂತರ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಕಾಲೇಜಿನ ಅಭಿವೃದ್ಧಿಗೆ ₹40 ಲಕ್ಷ ಅನುದಾನವನ್ನು ಬಿಡುಗಡೆಯ ಭರವಸೆಯನ್ನು ನೀಡಿದ್ದು, ಅದನ್ನು ಒದಗಿಸುತ್ತೇನೆ. ಕಾಲೇಜಿನಲ್ಲಿ ಕಾರ್ಯಕ್ರಮ ನಡೆಸಲು ಅಗತ್ಯವಾದ ಸಭಾಂಗಣದ ಮಾದರಿಯ ವಿಶಾಲವಾದ ಚಾವಣಿ ಮತ್ತು ನೆಲಹಾಸು ನಿರ್ಮಿಸಲು ಅಗತ್ಯವಾಗಿ ಕ್ರಮವಹಿಸುತ್ತೇನೆ. ಮುಂದಿನ 25 ವರ್ಷ ಯಾವುದೇ ಸೌಲಭ್ಯಗಳನ್ನು ಕೇಳದಂತೆ ಅಭಿವೃದ್ಧಿ ಮಾಡಲು ಕ್ರಮವಹಿಸುತ್ತೇನೆ’ ಎಂದು ಭರವಸೆ ನೀಡಿದರು.
‘ವಿದ್ಯಾರ್ಥಿಗಳು ಕೇವಲ ಅಂಕ ಪಡೆದು ಎಂಜಿನಿಯರ್, ಡಾಕ್ಟರ್ ಆಗುವುದು ಮಾತ್ರ ಮುಖ್ಯವಲ್ಲ. ಬದಲಿಗೆ ಇಲ್ಲಿ ಕಲಿಯುವ ವಿದ್ಯಾರ್ಥಿಗಳು ದೇಶದ ಸತ್ಪ್ರಜೆಗಳಾಗಿ ರೂಪಗೊಳ್ಳಬೇಕು’ ಎಂದರು.
ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ.ಕೆ.ಧನಂಜಯ್ ಅವರು ಪ್ರಾಸ್ತಾವಿಕ ಭಾಷಣ ಮಾಡಿದರು. ನಂತರ ಸಚಿವರಲ್ಲಿ ಕಾಲೇಜು ಅಭಿವೃದ್ಧಿಗೆ ಅಗತ್ಯ ಕ್ರಮವಹಿಸುವಂತೆ ಮನವಿಯನ್ನು ಮಾಡಿದರು. ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಕ್ರಮವಹಿಸುವ ಭರವಸೆ ನೀಡಿದರು.
ಪ್ರಸಕ್ತ ಸಾಲಿನಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಾದ ಆರ್.ರುದ್ರೇಶ್, ಪಿ.ಕೆ.ನಿಸರ್ಗ ಮತ್ತು ರೇಷ್ಮಾ ಅವರನ್ನು ಸಚಿವರು ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಜೊತೆಗೆ ಪ್ರೌಢಶಾಲೆ ವಿಭಾಗದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ಕಣ್ಮನ ಸೆಳೆದ ಕಲಾತಂಡಗಳ ಪ್ರದರ್ಶನ: ಕಾಲೇಜಿನ ವಿದ್ಯಾರ್ಥಿಗಳು ಜನಪದ ಕಲೆಗಳಾದ ವೀರಗಾಸೆ, ಪಟದ ಕುಣಿತ, ಸೋಮನ ಕುಣಿತ, ಪೂಜಾ ಕುಣಿತ ಸೇರಿದಂತೆ ತಮಟೆ ತಂಡಗಳನ್ನು ಸಿದ್ಧಪಡಿಸಿ ಹೆದ್ದಾರಿಯಲ್ಲಿ ಆಯೋಜಿಸಿದ್ದ ಮೆರವಣಿಗೆ ಕಣ್ಮನ ಸೆಳೆಯಿತು. ಅಮೃತ ಮತ್ತು ಸುವರ್ಣ ಮಹೋತ್ಸವದ ಲಾಂಛನವನ್ನು ತೆರೆದ ವಾಹನದಲ್ಲಿರಿಸಿ ಪೂರ್ಣಕುಂಭದೊಂದಿಗೆ ಮೆರವಣಿಗೆ ಮಾಡಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ನೀಡಿದರು.
ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಉಮೇಶ್, ಡಿವೈಎಸ್ಪಿ ಲಕ್ಷ್ಮೀನಾರಾಯಣ್, ಬಿಇಒ ಸುರೇಶ್, ತಾ.ಪಂ ಇಒ ಚಂದ್ರಮೌಳಿ, ಕಾಲೇಜಿ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ.ಕೆ.ಧನಂಜಯ್, ಸಿಪಿಐ ನಿರಂಜನ್, ಪ್ರಾಂಶುಪಾಲ ಎಂ.ಶಿವಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜೆ.ವೈ.ಮಂಜುನಾಥ್, ಕಾಲೇಜಿನ ಉಪನ್ಯಾಸಕರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.