ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ದಿಡ್ಡಳ್ಳಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಲಾಗಿದ್ದು, ಕೂಡಲೇ ಹಕ್ಕು ಪತ್ರ ವಿತರಿಸಿ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮೂಲ ನಿವಾಸಿ ಗಿರಿಜನರಿಗೆ ಮೂಲ ಸೌಲಭ್ಯ ಕಲ್ಪಿಸುವ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಹಕ್ಕುಪತ್ರ ವಿತರಿಸಿದ ನಂತರ ಸಂಬಂಧಿಸಿದವರಿಂದ ಮನೆ ಮಂಜೂರಾತಿಗೆ ಅರ್ಜಿ ಪಡೆಯಲು ಮುಂದಾಗಬೇಕು. ಈಗಾಗಲೇ ಹಂಚಿಕೆ ಆಗಿರುವ ನಿವೇಶನ ಜಾಗದಲ್ಲಿ ಮೂಲಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮಕೈಗೊಳ್ಳಬೇಕು. ಸ್ಥಳಾಂತರಗೊಂಡ ನಿರಾಶ್ರಿತ ಯುವಜನರಿಗೆ ಸ್ವಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕೌಶಲ ತರಬೇತಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ದಿಡ್ಡಳ್ಳಿ ನಿರಾಶ್ರಿತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮೂಲ ಸೌಲಭ್ಯ ಕಲ್ಪಿಸಿ ಎಂದು ಹೇಳಿದರು.
ಐಟಿಡಿಪಿ ಇಲಾಖಾ ಅಧಿಕಾರಿ ಪ್ರಕಾಶ್, ನಿವೇಶನ ಗುರುತಿಸಲಾಗಿರುವ ಕೆದಮುಳ್ಳೂರು, ಬಸವನಹಳ್ಳಿ, ರಾಂಪುರ ಜಾಗದಲ್ಲಿ ಕುಡಿಯುವ ನೀರು, ರಸ್ತೆ ನಿರ್ಮಾಣ ಮಾಡಲಾಗಿದೆ. ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿದೆ ಎಂದು ವಿವರಣೆ ನೀಡಿದರು.
ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾ ನಿರ್ದೇಶಕ ಸಿದ್ದಲಿಂಗ ಮೂರ್ತಿ, ಉದ್ಯೋಗ ವಿನಿಮಯಾಧಿಕಾರಿ ಸಿ.ಜಗನ್ನಾಥ್, ಜವಳಿ ಮತ್ತು ಕೈಮಗ್ಗ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ ಹಾಜರಿದ್ದರು