ಮಂಡ್ಯ: ಪಡಿತರ ಪದಾರ್ಥಗಳನ್ನು ಯಾವುದೇ ಲೋಪವಾಗದಂತೆ ಗ್ರಾಹಕರಿಗೆ ವಿತರಿಸಬೇಕು. ಇಲ್ಲದಿದ್ದರೆ ಕಾನೂನು ಪ್ರಕಾರ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ ಹೇಳಿದರು.
ನಗರದ ರೈತ ಸಭಾಂಗಣದಲ್ಲಿ ಬುಧವಾರ ನಡೆದ ನ್ಯಾಯಬೆಲೆ ಅಂಗಡಿ ಮಾಲೀಕರ ಸಭೆಯಲ್ಲಿ ಮಾತನಾಡಿದ ಅವರು, ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಲಾಗುವುದು ಎಂದರು.
ಈ ಹಿಂದೆ ಜಿಲ್ಲೆಯಲ್ಲಿ ಪಡಿತರ ಅಕ್ಕಿ ವಿತರಣೆಗಾಗಿ 700 ಲೋಡ್ ಬೇಕಾಗುತ್ತಿತ್ತು. ಜುಲೈ ತಿಂಗಳಿನಿಂದ 1,340 ಲೋಡ್ ಅಕ್ಕಿ ವಿತರಿಸಲು ದಾಸ್ತಾನು ಮಾಡಿಕೊಳ್ಳಬೇಕಿದೆ. ಇದಕ್ಕಾಗಿ ಬೇಕಾಗುವ ಅಗತ್ಯ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿಕೊಂಡಿದೆ ಎಂದರು.
ಜು.10 ರಂದು ಕೀಲಾರದಲ್ಲಿ ಒಂದು ರೂಪಾಯಿ ದರದಲ್ಲಿ ಅಕ್ಕಿ ವಿತರಿಸುವ ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಷ್ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ವೈಷಭರಾಜೇಂದ್ರ ಮೂರ್ತಿ,ರಾಜ್ಯ ನ್ಯಾಯಬೆಲೆ ಅಂಗಡಿಗಳ ಅಧ್ಯಕ್ಷ ಟಿ.ಕೃಷ್ಣಪ್ಪ, ಆರ್.ಎ.ಪಿ.ಸಿ.ಎಂ.ಎಸ್.ನ ವ್ಯವಸ್ಥಾಪಕ ನಿರ್ದೇಶಕ ನಾಗರಾಜು ಮತ್ತಿತರರು ಉಪಸ್ಥಿತರಿದ್ದರು.