ವಿಜಯಪುರ: ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಜಂಟಿ ಕಾರ್ಮಿಕ ಸಂಘಟನೆ ವತಿಯಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಎಲ್ಲಾ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ, ಕಾರ್ಯಕರ್ತೆಯರಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ಗಳನ್ನು ಜಿಲ್ಲಾ ಪ್ರಕೃತಿ ವಿಕೋಪ ನಿಧಿಯಿಂದ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಜನರಲ್ಲಿ ಜಾಗೃತಿ ಹಾಗೂ ಸರ್ವೆ ಕಾರ್ಯ ಮಾಡುವ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ಪ್ರೋತ್ಸಾಹ ಧನ ನೀಡಬೇಕು. ಬೇರೆ ರಾಜ್ಯದಲ್ಲಿ ಸಿಲಿಕಿರುವ ಜಿಲ್ಲೆಯ ಕಾರ್ಮಿಕರನ್ನು ಕರೆಸಿಕೊಳ್ಳಲು ಸೂಕ್ತ ಕ್ರಮ ಕೈಗೊಳ್ಳಬೇಕು. ಮನೆಗೆಲಸ, ಕಟ್ಟಡ, ಹಮಾಲರು, ವಾಹನ ಚಾಲಕರಿಗೆ ಉಚಿತ ಅಡುಗೆ ಅನಿಲ ಮತ್ತು ಆಹಾರದ ಕಿಟ್ ವಿತರಿಸಬೇಕು. ರೈತರು ಬೆಳೆದಿರುವ ಬೆಳೆಗಳನ್ನು ಸರ್ಕಾರ ಖರೀದಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಯಿತು.
ಕಾರ್ಮಿಕ ಮುಖಂಡ ಭೀಮಸಿ ಕಲಾದಗಿ, ಎಐಯುಟಿಯುಸಿ ಅಧ್ಯಕ್ಷ ಮಲ್ಲಿಕಾರ್ಜುನ ಎಚ್.ಟಿ, ಎಸ್ಐಎಫ್ಟಿ ಅಧ್ಯಕ್ಷ ಪ್ರಭುಗೌಡ ಪಾಟೀಲ, ಸಿಐಟಿಯು ಕಾರ್ಯದರ್ಶಿ ಲಕ್ಷ್ಮಣ ಹಂದ್ರಾಳ, ಎಐಯುಟಿಯುಸಿ ಕಾರ್ಯದರ್ಶಿ ಸುನಿಲ ಸಿದ್ರಾಮಶೆಟ್ಟಿ, ವಕೀಲ ಟಿ.ಸಿ.ದೊದಮನಿ, ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಪರಪ್ಪಗೌಡ ಇದ್ದರು.