ಮೈಸೂರು: ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಅವರಿಗೆ ಕೇಂದ್ರ ಸರ್ಕಾರ ಅನಗತ್ಯವಾಗಿ ತೊಂದರೆ ಕೊಡುತ್ತಿದೆ ಎಂದು ಆರೋಪಿಸಿ ವಿವಿಧ ಒಕ್ಕಲಿಗ ಸಂಘಟನೆಗಳ ನೇತೃತ್ವದಲ್ಲಿ ಕಾರ್ಯಕರ್ತರು ಭಾನುವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು.
ಇಲ್ಲಿನ ಪಡುವಾರಹಳ್ಳಿಯ ಆದಿಚುಂಚನಗಿರಿ ಹಾಸ್ಟೆಲ್ ಬಳಿ ಸೇರಿದ ಪ್ರತಿಭಟನಾಕಾರರು ಕಿರುಕುಳ ನಿಲ್ಲಿಸದೇ ಹೋದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಾರಿ ನಿರ್ದೇಶನಾಲಯದ ಮೂಲಕ ಶಿವಕುಮಾರ್ ಅವರಿಗೆ ಕಿರುಕುಳ ನೀಡಲಾಗುತ್ತಿದೆ. ಇದೇ ರೀತಿ ಒಕ್ಕಲಿಗರ ಮುಖಂಡರನ್ನು ವ್ಯವಸ್ಥಿತವಾಗಿ ತುಳಿಯುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಕಿಡಿಕಾರಿದರು.
ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘ, ಪಡುವಾರಹಳ್ಳಿ, ನಜರ್ಬಾದ್, ಸಿದ್ದಾರ್ಥ ಬಡಾವಣೆ, ಹಿನಕಲ್ ಒಕ್ಕಲಿಗರ ಸಂಘಗಳು, ಒಕ್ಕಲಿಗರ ಯುವವೇದಿಕೆ ಸೇರಿದಂತೆ ಜಿಲ್ಲೆಯ ಎಲ್ಲ ತಾಲ್ಲೂಕುಗಳ ಒಕ್ಕಲಿಗರ ಸಂಘಗಳು ಪ್ರತಿಭಟನೆಯಲ್ಲಿ ಭಾಗಿಯಾದವು.