ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉನ್ನತ ಶಿಕ್ಷಣದಲ್ಲಿ ಹಣ ಹೂಡಿಕೆ ಅಗತ್ಯ

Last Updated 15 ಮಾರ್ಚ್ 2011, 8:35 IST
ಅಕ್ಷರ ಗಾತ್ರ

ಮೈಸೂರು: ‘ಭಾರತದಲ್ಲಿ ಈಗಾಗಲೇ 500ಕ್ಕೂ ಹೆಚ್ಚು ವಿಶ್ವವಿದ್ಯಾನಿಲಯಗಳು ಕಾರ್ಯ ನಿರ್ವಹಿಸುತ್ತಿದ್ದು ಇನ್ನೂ 1500 ವಿವಿಗಳ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣದಲ್ಲಿ ಅಪಾರ  ಪ್ರಮಾಣದ ಹಣ ಹೂಡಿಕೆ ಮಾಡಬೇಕಾಗಿದೆ’ ಎಂದು ಭಾರತ ಸರ್ಕಾರದ ಯೋಜನಾ ಆಯೋಗ ಮತ್ತು ರಾಷ್ಟ್ರೀಯ ಸಲಹಾ ಮಂಡಳಿ ಸದಸ್ಯ  ಡಾ.ನರೇಂದ್ರ ಜಾಧವ್ ಇಲ್ಲಿ ಹೇಳಿದರು.

ನಗರದ ಕಲಾಮಂದಿರದಲ್ಲಿ ಸೋಮವಾರ  ಏರ್ಪಡಿಸಿದ್ದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾ ನಿಲಯದ 11ನೇ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು.‘1500 ವಿವಿಗಳನ್ನು ಆರಂಭಿಸಲು ರೂ.9 ಲಕ್ಷ ಕೋಟಿ ಹಣ ಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ ಮಾದರಿ)  ವಿವಿಗಳನ್ನು ಆರಂಭಿಸಲು ಸರ್ಕಾರ ಯೋಜನೆ ರೂಪಿಸಬೇಕು. ಉನ್ನತ ಶಿಕ್ಷಣದಲ್ಲಿ ಇಂದು ಬಹಳಷ್ಟು ಅವಕಾಶಗಳು ಲಭ್ಯ ಇವೆ. ಆದ್ದರಿಂದ ವಿ.ವಿಗಳ ಮೂಲ ಸೌಕರ್ಯ ಮತ್ತು ಹೊಸ ವಿಶ್ವವಿದ್ಯಾ ನಿಲಯಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು’ ಎಂದು ಅಭಿಪ್ರಾಯಪಟ್ಟರು.

‘ಅಭಿವೃದ್ಧಿ ವಿಷಯದಲ್ಲಿ ಚೀನಾ ನಂತರ ಭಾರತ ಎರಡನೇ ಸ್ಥಾನದಲ್ಲಿದೆ. ಮಾನವ ಸಂಪನ್ಮೂಲವನ್ನು ಸೂಕ್ತವಾಗಿ ಬಳಸಿಕೊಳ್ಳುವ ಮೂಲಕ ಆರ್ಥಿಕ ಅಭಿವೃದ್ಧಿ ದರದಲ್ಲಿ ಬದಲಾವಣೆ ತರಬೇಕು. ಯುವ ಪದವೀಧರರಿಗೆ ಇಂದು ಸಾಕಷ್ಟು ಉದ್ಯೋಗಾವಕಾಶಗಳು ಲಭ್ಯ ಇವೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಭವಿಷ್ಯ ರೂಪಿಸಿಕೊಳ್ಳುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಜವಾಬ್ದಾರಿ ಆಗಿದೆ’ ಎಂದರು.

ಇದೇ ಸಂದರ್ಭದಲ್ಲಿ 39 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, 22 ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ಸೇರಿದಂತೆ ಒಟ್ಟು 18,328 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.ಮುಕ್ತ ವಿವಿ ಕುಲಪತಿ ಪ್ರೊ. ಕೆ.ಎಸ್.ರಂಗಪ್ಪ, ಕುಲಸಚಿವ ಕೆ.ಆರ್.ಜಯಪ್ರಕಾಶ್‌ರಾವ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT