ಮೈಸೂರು: ಬೆಂಗಳೂರು ಮತ್ತು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತಾ ಇಲಾಖೆ ಆಯುಕ್ತ ಹಾಗೂ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಪಿ.ಎಸ್.ಸಂಧು ಸೂಚನೆ ನೀಡಿದರು.
ಶ್ರೀರಂಗಪಟ್ಟಣದ ಬಳಿ 11, ಮಂಡ್ಯದಲ್ಲಿ 10 ಹಾಗೂ ಮೈಸೂರಿನಲ್ಲಿ 1 ಅಪಘಾತ ಸಂಭವಿಸುವ ‘ಬ್ಲಾಕ್ ಸ್ಪಾಟ್’ಗಳನ್ನು ಗುರುತಿಸಲಾಗಿದೆ ಎಂದು ಸಂಬಂಧಪಟ್ಟ ಜಿಲ್ಲೆಯ ಪೊಲೀಸರು ಮಾಹಿತಿ ನೀಡಿದರು.
ಇಲ್ಲಿ ಅಪಘಾತ ತಡೆಯುವುದು ಹೇಗೆ, ಯಾವ ಕಾರಣಕ್ಕೆ ಹೆಚ್ಚು ಅಪಘಾತ ನಡೆಯುತ್ತಿದೆ ಎಂಬ ಕುರಿತ ವಿವರಣೆಗಳನ್ನು ಪಡೆದ ಅವರು ಇದನ್ನು ತಡೆಗಟ್ಟುವ ಸಂಬಂಧ ವಿವರವಾದ ವರದಿ ಸಲ್ಲಿಸಬೇಕು ಎಂದು ಹೇಳಿದರು.
ತಾತ್ಕಾಲಿಕವಾಗಿ ಬಗೆಹರಿಸಬಹುದಾದ ಸಮಸ್ಯೆಗಳಿದ್ದರೆ ಕೂಡಲೇ ಕ್ರಮ ಕೈಗೊಳ್ಳಬೇಕು. ರಸ್ತೆ ಕುರಿತ ಸಮಸ್ಯೆಗಳಿದ್ದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಕತ್ತಲೆಯಿಂದ ಅಪಘಾತ ಸಂಭವಿಸಿದ್ದರೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಗಮನಕ್ಕೆ ತಂದು ಕಾಲಮಿತಿಯೊಳಗೆ ಸಮಸ್ಯೆ ಬಗೆಹರಿಸಬೇಕು ಎಂದು ತಿಳಿಸಿದರು.
ಎಲ್ಲಿಯಾದರೂ ನಿಯಮಕ್ಕೆ ವಿರುದ್ಧವಾಗಿ ಅವೈಜ್ಞಾನಿಕವಾಗಿ ‘ಸ್ಪೀಡ್ ಬ್ರೇಕರ್’ಗಳನ್ನು ಅಳವಡಿಸಿದ್ದರೆ ಅದನ್ನು ಕೂಡಲೇ ತೆಗೆಯಬೇಕು. ಅಪಘಾತದ ಪ್ರಮಾಣ ಕಡಿಮೆಯಾಗುತ್ತಿದೆ. ಆದರೆ, ಮತ್ತಷ್ಟು ಕಡಿಮೆಯಾಗಬೇಕಾದ ಅಗತ್ಯ ಇದೆ ಎಂದು ಅವರು ಹೇಳಿದರು.
ನಗರ ಪೊಲೀಸ್ ಕಮೀಷನರ್ ಕೆ.ಟಿ.ಬಾಲಕೃಷ್ಣ ಸೇರಿದಂತೆ ಮೈಸೂರು, ಮಂಡ್ಯ ಜಿಲ್ಲೆಗಳ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿದ್ದರು.