ಮೈಸೂರು: ‘ಇಲ್ಲಿನ ಅಂಬಾವಿಲಾಸ ಅರಮನೆ ಆವರಣದಲ್ಲಿ ಜೂನ್ 21ರಂದು ನಡೆಯಲಿರುವ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಭಾನುವಾರ ಆಯೋಜಿಸಿದ್ದ ಯೋಗಾಭ್ಯಾಸದ ಅಂತಿಮ ಹಂತದ ತಾಲೀಮನ್ನು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ವೀಕ್ಷಿಸಿದರು.
ಅರಮನೆ ಆವರಣದಲ್ಲಿ ಬೆಳಿಗ್ಗೆ 6.30ಕ್ಕೆ 10ಸಾವಿರಕ್ಕೂ ಅಧಿಕ ಯೋಗಪಟುಗಳು ತಾಲೀಮು ನಡೆಸಿದರು. ವೇದಿಕೆ ಸಿದ್ಧತೆ, ಯೋಗಪಟುಗಳಿಗೆ ಸ್ಥಳಾವಕಾಶ, ಕುಡಿಯುವ ನೀರಿನ ವ್ಯವಸ್ಥೆ, ಸಾರ್ವಜನಿಕರು ಹಾಗೂ ಗಣ್ಯರಿಗೆ ಎಲ್ಲೆಲ್ಲಿ ಪ್ರವೇಶ ಕಲ್ಪಿಸಲಾಗಿದೆ ಎಂಬುದನ್ನು ಸಚಿವರು ವೀಕ್ಷಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜೂನ್ 5 ಮತ್ತು 12ರಂದು ಕೂಡ ಯೋಗ ತಾಲೀಮು ನಡೆಸಲಾಗಿತ್ತು. 51 ವಿವಿಧ ವರ್ಗದ ಜನರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಯೋಗ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಿದ್ಧತೆ ಪೂರ್ಣಗೊಂಡಿದೆ. ನಾಲ್ಕು ಕಡೆಗಳಿಂದ ಪ್ರವೇಶ ಕಲ್ಪಿಸಲಾಗಿದೆ. ಬೆಳಿಗ್ಗೆ 5.30ಕ್ಕೆ ಪ್ರವೇಶದ್ವಾರ ಬಂದ್ ಆಗಲಿದೆ. ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು’ ಎಂದು ಕೋರಿದರು.
ಗೃಹ ಸಚಿವ ಆರಗ ಜ್ಞಾನೇಂದ್ರ ಅರಮನೆ ಆವರಣಕ್ಕೆ ಭೇಟಿ ನೀಡಿ ಭದ್ರತೆ ಹಿನ್ನೆಲೆಯಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಶೀಲಿಸಿದರು. ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್. ನಾಗೇಂದ್ರ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಎಸ್ಪಿ ಚೇತನ್ ಇದ್ದರು.