ಮೈಸೂರು: ‘ಸೂರ್ಯ–ಚಂದ್ರರಿರುವ ತನಕವೂ ಡಿ.ದೇವರಾಜ ಅರಸು ಹೆಸರು ಅಜರಾಮರವಾಗಿರುತ್ತದೆ’ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಗುರುವಾರ ಇಲ್ಲಿ ತಿಳಿಸಿದರು.
ನಗರದ ಕಲಾ ಮಂದಿರದ ಮನೆಯಂಗಳದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 105ನೇ ಜನ್ಮದಿನಾಚರಣೆ ಉದ್ಘಾಟಿಸಿದ ಅವರು ಮಾತನಾಡಿದರು.
‘ದೇವರಾಜ ಅರಸು ಅವರ ಹೆಸರಿನಲ್ಲಿ ಹುಣಸೂರು ಮುಂದಿನ ದಿನಗಳಲ್ಲಿ ಜಿಲ್ಲೆಯಾಗಬೇಕಿದೆ. ಇದಕ್ಕೆ ಅರಸು ಅವರ ಹೆಸರಿನ ಸಂಘಟನೆಗಳು ಹಾಗೂ ಜನಪ್ರತಿನಿಧಿಗಳು ಬೆಂಬಲ ನೀಡಬೇಕು’ ಎಂದು ಮನವಿ ಮಾಡಿಕೊಂಡರು.
‘ಅರಸು ಬೆಳೆಸಿದ ಕುಡಿಗಳು ಇಂದು ಹೆಮ್ಮರವಾಗಿ ಬೆಳೆದಿವೆ. ಅವರ ಸಾಧನೆ ಮತ್ತು ಯೋಜನೆಗಳನ್ನು ತಿಳಿದುಕೊಳ್ಳುವಲ್ಲಿ ಎಲ್ಲರೂ ಮುಂದಾಗಬೇಕು’ ಎಂದು ಕಿವಿಮಾತು ಹೇಳಿದರು.
ಹುಣಸೂರು ಶಾಸಕ ಎಚ್.ಪಿ.ಮಂಜುನಾಥ್ ಮಾತನಾಡಿ, ‘ಮುಂದಿನ ಪೀಳಿಗೆಯ ಯುವ ರಾಜಕಾರಣಿಗಳಿಗೆ ಅರಸು ಮಾರ್ಗದರ್ಶಕರು. ಅವರು ರೂಪಿಸಿದ ಯೋಜನೆಗಳನ್ನು ಇಂದು ಮರೆಯಲಾಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.
ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕ–ಬಾಲಕಿಯರ ವಸತಿ ನಿಲಯಗಳಲ್ಲಿ ವ್ಯಾಸಂಗ ಮಾಡಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗೌರಮ್ಮ ಸೋಮಶೇಖರ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಎಸ್.ಮಂಜುನಾಥ್ ಮತ್ತಿತರರಿದ್ದರು.