ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ 71 ನೇ ಜನ್ಮದಿನ ಅಂಗವಾಗಿ ಕೆ.ಆರ್.ಕ್ಷೇತ್ರದ ಬಿಜೆಪಿ ಘಟಕದಿಂದ ಸೆ.17 ರಿಂದ ಅ.6ರ ವರೆಗೆ ಆಯೋಜಿಸಿರುವ ‘ಮೋದಿ ಯುಗ ಉತ್ಸವ’ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ಲಭಿಸಲಿದೆ.
ಮೋದಿ ಜನ್ಮದಿನ ಹಾಗೂ ಅವರು ಗುಜರಾತಿನ ಮುಖ್ಯಮಂತ್ರಿ ಆಗಿ 20 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಶಾಸಕ ಎಸ್.ಎ.ರಾಮದಾಸ್ ತಮ್ಮ ಕ್ಷೇತ್ರದಲ್ಲಿ ‘ಮೋದಿ @71 ಆಜಾದ್ ಭಾರತ್ @75 ಸ್ವರ್ಣ ಕೆ.ಆರ್’ ಎಂಬ ಹೆಸರಿನಲ್ಲಿ 20 ದಿನಗಳ ಕಾರ್ಯಕ್ರಮ ಆಯೋಜಿಸಿದ್ದಾರೆ.
‘ವಿದ್ಯಾರಣ್ಯಪುರಂನ ರಾಮಲಿಂಗೇಶ್ವರ ದೇವಸ್ಥಾನದ ಬಳಿ ಮಧ್ಯಾಹ್ನ 12ಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪಸಿಂಹ, ಮೇಯರ್ ಸುನಂದಾ ಫಾಲನೇತ್ರ, ಶಾಸಕ ಎಲ್.ನಾಗೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಾಲ್ಗೊಳ್ಳಲಿದ್ದಾರೆ’ ಎಂದು ರಾಮದಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಮಾತೃ ವಂದನಾ, ಪೋಷಣ್ ಆಭಿಯಾನ, ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ, ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ವಿತರಣೆ, ಮೋದಿ ಯುಗ ಉತ್ಸವದ ಕಾರ್ಯಕ್ರಮಗಳ ಕುರಿತು ಮಾಹಿತಿ ಇರುವ ಫಲಕದ ಉದ್ಘಾಟನೆಯೂ ಇದೇ ವೇಳೆ ನಡೆಯಲಿದೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.