ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆರೆ ಸಂತ್ರಸ್ತರಿಗೆ ಕೇಂದ್ರದಿಂದ ನೆರವು; ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ

Last Updated 16 ಅಕ್ಟೋಬರ್ 2020, 14:06 IST
ಅಕ್ಷರ ಗಾತ್ರ

ಮೈಸೂರು: ‘ರಾಜ್ಯದ ಉತ್ತರ ಭಾಗದಲ್ಲಿ ತಲೆದೋರಿರುವ ನೆರೆ ಪರಿಸ್ಥಿತಿ ಬಗ್ಗೆ ಗೃಹ ಸಚಿವ ಅಮಿತ್ ‌ಶಾ ಜತೆ ಮಾತನಾಡಿದ್ದು, ಹೆಚ್ಚಿನ ನೆರವು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ದಸರಾ ಉದ್ಘಾಟನೆಗೆ ಶುಕ್ರವಾರ ಮೈಸೂರಿಗೆ ಬಂದ ಅವರು ಮಾಧ್ಯಮದವರ ಜತೆ ಮಾತನಾಡಿ, ‘ನೆರೆ ಹಾವಳಿಗೆ ಒಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮಾತನಾಡಿದ್ದೇನೆ.‌ 5-6 ಜಿಲ್ಲೆಗಳಲ್ಲಿ ಕಳೆದ ಬಾರಿಗಿಂತ ಹೆಚ್ಚಿನ ಹಾನಿ‌ ಉಂಟಾಗಿದೆ. ನಷ್ಟದ ಬಗ್ಗೆ ಅಂದಾಜು ಮಾಡಿ ವಾರದೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದೇನೆ’ ಎಂದರು.

ಸಂತ್ರಸ್ತರಿಗೆ ಪರಿಹಾರ ನೀಡಲು‌ ಎಲ್ಲ ಸಿದ್ಧತೆ ಮಾಡಲಾಗಿದೆ. ಹಣ ಬಿಡುಗಡೆ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳ ಖಾತೆಗೆ ಜಮಾ ಆಗಿದೆ. ತಕ್ಷಣದ ಪರಿಹಾರವಾಗಿ ತಲಾ ₹ 10 ಸಾವಿರ ಕೊಡಲಾಗಿದೆ. ಮನೆ ಕಳೆದುಕೊಂಡವರಿಗೆ ₹ 5 ಲಕ್ಷ ವೆಚ್ಚದಲ್ಲಿ ಮನೆ ಕಟ್ಟಿಸಿಕೊಡಲಾಗುತ್ತದೆ ಎಂದು ತಿಳಿಸಿದರು.

ಸರಳ ದಸರಾ: ‘ಕೋವಿಡ್ ಕಾರಣ ಈ ಬಾರಿ ದಸರಾ ಸರಳವಾಗಿ ಆಚರಿಸಲಾಗುತ್ತದೆ. ಅದಕ್ಕೆ ಬೇಕಾದ ಪೂರ್ವ ಸಿದ್ಧತೆಯನ್ನು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಅಧಿಕಾರಿಗಳು ಮಾಡಿದ್ದಾರೆ. ಕೋವಿಡ್ ಪರಿಸ್ಥಿತಿ ಅರ್ಥ ಮಾಡಿಕೊಂಡು ಸರಳ ದಸರೆಗೆ ಎಲ್ಲರೂ ಸಹಕರಿಸಬೇಕು’ ಎಂದು ಮನವಿ ಮಾಡಿದರು.

‘ಎರಡೂ ಕಡೆ ಗೆದ್ದಾಗಿದೆ’
ಉಪಚುನಾವಣೆಗೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ‘ಶಿರಾ ಮತ್ತು ಆರ್.ಆರ್ ನಗರದಲ್ಲಿ ಬಿಜೆಪಿ ಈಗಾಗಲೇ ಗೆದ್ದಾಗಿದೆ. ದೊಡ್ಡ‌ ಅಂತರದಲ್ಲಿ ಗೆಲ್ಲಬೇಕೆಂಬುದು ನಮ್ಮ ಅಪೇಕ್ಷೆ. ‍ಎರಡೂ ಕಡೆ ಭಾರಿ ಅಂತರದ ಜಯದ ಬಗ್ಗೆ ಯಾವುದೇ ಅನುಮಾನ ಬೇಡ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT