ನಂಜನಗೂಡು: ದೇವನೂರು ಗ್ರಾಮದ ಹೊರವಲಯದ ಜಮೀನಿನಲ್ಲಿ ಕಾಣಿಸಿಕೊಂಡ ಕಾಡು ಬೆಕ್ಕನ್ನು ಬುಧವಾರ ಅರಣ್ಯ ಇಲಾಖೆ ಸಿಬ್ಬಂದಿ ಬಲೆ ಬೀಸಿ ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟರು.
ಕಳೆದ ಮೂರು ದಿನಗಳಿಂದ ಗ್ರಾಮದಲ್ಲಿ ಕಾಣಿಸಿಕೊಳ್ಳುತ್ತಿದ್ದ ಕಾಡು ಬೆಕ್ಕನ್ನು ಚಿರತೆ ಎಂದು ಭಾವಿಸಿದ್ದ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಅರಣ್ಯ ಸಿಬ್ಬಂದಿ ಬಲೆ ಬೀಸಿ ಹಿಡಿದಾಗ ಕಾಡು ಬೆಕ್ಕು ಸೆರೆಯಾಯಿತು.
‘ಕಾಡು ಬೆಕ್ಕು ಮನುಷ್ಯರ ಮೇಲೆ ದಾಳಿ ಮಾಡುವ ಪ್ರಾಣಿಯಲ್ಲ ಎಂದು ಗ್ರಾಮಸ್ಥರಿಗೆ ಮನವರಿಕೆ ಮಾಡಿದೆವು. ನಂತರ ಕೋಣನೂರು ಸಮೀಪದ ಕುರುಚಲು ಅರಣ್ಯ ಪ್ರದೇಶಕ್ಕೆ ಬಿಡಲಾಯಿತು’ ಎಂದು ಆರ್.ಎಫ್.ಒ ರಕ್ಷಿತ್ ‘ಪ್ರಜಾವಾಣಿ’ಗೆ ತಿಳಿಸಿದರು.