ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾಯತ್ತತೆ ಪ್ರಯತ್ನಕ್ಕೆ ಹಿನ್ನಡೆ ಸಾಧ್ಯತೆ

ಉನ್ನತ ಶಿಕ್ಷಣ ಸಚಿವರಿಗೆ ಟಿ.ಎಸ್‌.ನಾಗಾಭರಣ ಪತ್ರ
Last Updated 5 ಜುಲೈ 2020, 8:53 IST
ಅಕ್ಷರ ಗಾತ್ರ

ಮೈಸೂರು: ಮೈಸೂರಿನ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ ಸ್ಥಾಪನೆಗೆ ನೀಡಿರುವ ಜಮೀನನ್ನು ಹಿಂಪಡೆಯುವಂತೆ ಉನ್ನತ ಶಿಕ್ಷಣ ಇಲಾಖೆಯು ಮೈಸೂರು ವಿಶ್ವವಿದ್ಯಾಲಯಕ್ಕೆ ಸೂಚಿಸಿರುವುದರಿಂದ, ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ದೊರಕಿಸಿಕೊಡುವ ಪ್ರಯತ್ನಕ್ಕೆ ತೀವ್ರ ಹಿನ್ನಡೆಯಾಗುವ ಸಂಭವವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅಭಿಪ್ರಾಯಪಟ್ಟಿದ್ದಾರೆ.

‘ಶಾಸ್ತ್ರೀಯ ಕನ್ನಡ ಕೇಂದ್ರಕ್ಕೆ ಸ್ವಾಯತ್ತತೆ ದೊರಕಿಸಿಕೊಡಲು ಹಲವು ವರ್ಷಗಳಿಂದ ಪ್ರಯತ್ನ ನಡೆಯುತ್ತಿದೆ. ಈ ಬೆಳವಣಿಗೆಗಳ ಮಾಹಿತಿಯ ಕೊರತೆಯಿಂದಾಗಿ, ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರು ವಿಶ್ವವಿದ್ಯಾಲಯಕ್ಕೆ ಪತ್ರ ಬರೆದಿದ್ದಾರೆ. ಆದ್ದರಿಂದ, ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ಆದೇಶ ಪತ್ರವನ್ನು ಹಿಂಪಡೆಯಲು ನಿರ್ದೇಶಿಸಬೇಕು’ ಎಂದು ನಾಗಾಭರಣ ಅವರು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಅವರಿಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಮೈಸೂರು ವಿಶ್ವವಿದ್ಯಾಲಯದ ಕಟ್ಟಡವೂ ಸೇರಿದಂತೆ ಮೂರು ಎಕರೆ ಜಾಗವನ್ನು 30 ವರ್ಷಗಳ ಅವಧಿಗೆ ಭಾರತೀಯ ಭಾಷಾ ಸಂಸ್ಥಾನಕ್ಕೆ ನೀಡಿತ್ತು. ರಾಜ್ಯ ಸರ್ಕಾರವು ಈ ಜಾಗ ನೀಡಿರುವುದರಿಂದ, ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರವನ್ನು ಸ್ವಾಯತ್ತ ಸಂಸ್ಥೆಯನ್ನಾಗಿ ರೂಪಿಸುವಂತೆ ಕೋರಿ ಭಾರತೀಯ ಭಾಷಾ ಸಂಸ್ಥಾನವು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿತ್ತು. ಈ ಪ್ರಸ್ತಾವದ ಆಧಾರದ ಮೇಲೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಅವರು ಕೇಂದ್ರ ಮಾನವ ಸಂಪನ್ಮೂಲ ಇಲಾಖೆಗೆ ಪತ್ರ ಬರೆದು ಅತ್ಯುನ್ನತ ಕೇಂದ್ರವನ್ನು ಸ್ವಾಯತ್ತ ಸಂಸ್ಥೆಯಾಗಿ ರೂಪಿಸಲು ಕ್ರಮಕೈಗೊಳ್ಳುವಂತೆ ಮನವಿಯನ್ನೂ ಮಾಡಿದ್ದರು. ಇದೀಗ ಜಾಗ ಹಿಂಪಡೆದರೆ ಈ ಎಲ್ಲ ಪ್ರಯತ್ನಗಳಿಗೆ ಹಿನ್ನಡೆಯಾಗಲಿದೆ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT