ಮೈಸೂರು: ಸುಳ್ವಾಡಿ ಪ್ರಕರಣವನ್ನು ನಿಭಾಯಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದರು.
ಚಾಮರಾಜನಗರದ ಹನೂರು ತಾಲ್ಲೂಕಿನ ಸುಳ್ವಾಡಿ ಕಿಚ್ಚುಗುತ್ತು ಮಾರಮ್ಮ ದೇವಾಲಯದಲ್ಲಿ ವಿಷಮಿಶ್ರಿತ ಪ್ರಸಾದ ಸೇವಿಸಿ ಅಸ್ವಸ್ಥರಾದವರನ್ನು ಅವರು ಭಾನುವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಬಳಿಕ ಸುದ್ದಿಗಾರರ ಜತೆ ಮಾತನಾಡಿ, ಸಾವಿನ ಸಂಖ್ಯೆ ಹೆಚ್ಚಾಗಲು ಆರೋಗ್ಯ ಇಲಾಖೆಯ ವೈಫಲ್ಯವೇ ಕಾರಣ. ಸ್ಥಳೀಯ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ಗಳ ಕೊರತೆಯಿದೆ. ಅಸ್ವಸ್ಥರನ್ನು ಮೈಸೂರಿಗೆ ಕರೆದೊಯ್ಯಲು ಬೇಕಾದಷ್ಟು ಆಂಬುಲೆನ್ಸ್ಗಳು ಕೂಡಾ ಇರಲಿಲ್ಲ ಎಂದರು.
ಜಿಲ್ಲಾಮಟ್ಟದ ಆಸ್ಪತ್ರೆಗಳಲ್ಲಿ ಹೆಚ್ಚಿನ ಸೌಲಭ್ಯ ಕಲ್ಪಿಸಬೇಕಿದೆ. ಸರ್ಕಾರ ತನ್ನ ಜವಾಬ್ದಾರಿ ಮರೆತು ಕೆಲಸ ಮಾಡುತ್ತಿದೆ. ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಿಸುತ್ತೇನೆ ಎಂದು ಹೇಳಿದರು.
ದೇವಾಲಯದ ಆಡಳಿತದ ವಿಚಾರದಲ್ಲಿ ಎರಡು ಬಣಗಳ ನಡುವೆ ಕಚ್ಚಾಟ ನಡೆಯುತ್ತಿರುವ ವಿಚಾರ ಗೊತ್ತಿದ್ದರೂ ಸಂಬಂಧಪಟ್ಟವರು ಗಮನ ಹರಿಸಲಿಲ್ಲ. ಇದರಿಂದಾಗಿಯೇ ದುರಂತ ನಡೆದಿದೆ ಎಂದು ದೂರಿದರು.
ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೀಡಿರುವ ಪರಿಹಾರ ಮೊತ್ತವನ್ನು ₹10 ಲಕ್ಷಕ್ಕೆ ಹೆಚ್ಚಿಸಬೇಕು. ದೇವಾಲಯವನ್ನು ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.