ಜಯಪುರ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಕೇವಲ ₹250 ಮೌಲ್ಯದ ಪಂಚೆ, ಶರ್ಟ್ ಮಾತ್ರ ಧರಿಸುತ್ತಾರೆ. ಆದರೆ, ನರೇಂದ್ರ ಮೋದಿ ಲಕ್ಷ ರೂಪಾಯಿ ಮೌಲ್ಯದ ಸೂಟು ಧರಿಸುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಸಿ.ಎಂ. ಇಬ್ರಾಹಿಂ ಆರೋಪಿಸಿದರು.
ಮೈಸೂರು ತಾಲ್ಲೂಕಿನ ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಜಯಪುರ ಹೋಬಳಿಯಲ್ಲಿ ಮೈಸೂರು– ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಮೋದಿ ಶ್ರೀಮಂತರ ಪರ ಇದ್ದರೆ, ದೇವೇಗೌಡರು ಇಂದಿಗೂ ರೈತರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಆರೂವರೆ ಕೋಟಿ ಜನರ ಸ್ವತ್ತು ಎಂದರು.
ಅಂಬೇಡ್ಕರ್ ಸಿದ್ಧಾಂತವನ್ನು ಅಳವಡಿಸಿಕೊಂಡ ವಿ. ಶ್ರೀನಿವಾಸ ಪ್ರಸಾದ್ ಅಂಬೇಡ್ಕರ್ ಭವನದಲ್ಲಿ ಬೆಳೆದು ಇಂದು ಬೆಂಗಳೂರಿನ ಕೇಶವ ಕೃಪಾದಲ್ಲಿ ಇರುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದರು.
ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ‘ಮನುವಾದಿಗಳ ಅಭ್ಯರ್ಥಿಯಾದ ಪ್ರತಾಪ ಸಿಂಹ ಮಹಾನ್ ಸುಳ್ಳುಗಾರ. ನಾನು ಮುಖ್ಯಮಂತ್ರಿ ಆಗಿದ್ದಾಗ ಮೈಸೂರು– ಬೆಂಗಳೂರು ಜೋಡಿ ರೈಲು ಮಾರ್ಗಕ್ಕೆ ಹೆಚ್ಚಿನ ಅನುದಾನ ನೀಡಿದ್ದೆ. ಈ ಕೆಲಸವನ್ನು ನಾನೇ ಮಾಡಿದ್ದೇನೆ ಎಂದು ಪ್ರತಾಪಸಿಂಹ ಹೇಳಿಕೊಂಡು ಓಡಾಗುತ್ತಿದ್ದಾರೆ’ ಎಂದು ಅವರು ದೂರಿದರು.
ಸಚಿವ ಜಿ.ಟಿ. ದೇವೇಗೌಡ ಮಾತನಾಡಿ, ‘ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಅಣ್ಣ ತಮ್ಮಂದಿರಂತೆ ಇದ್ದಾರೆ. ಮೈತ್ರಿ ಅಭ್ಯರ್ಥಿ ಸಿ.ಎಚ್.ವಿಜಯಶಂಕರ್ ಅವರನ್ನು ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.