ಮೈಸೂರು: ತಳವಾರ, ಪರಿವಾರ ಸಮುದಾಯವನ್ನು ಪರಿಶಿಷ್ಟ ಪಂಗಡದ (ಎಸ್ಟಿ) ಪಟ್ಟಿಗೆ ಸೇರ್ಪಡೆ ಮಾಡಿ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದ್ದರೂ ಕೆಲ ಅಧಿಕಾರಿಗಳು ಮತ್ತೆ ಪ್ರವರ್ಗ–1ಕ್ಕೆ ಸೇರಿಸಿ, ಗೊಂದಲ ಸೃಷ್ಟಿಸಿದ್ದಾರೆ ಎಂದು ಸಂಸದ ಪ್ರತಾಪಸಿಂಹ ಆಕ್ರೋಶ ವ್ಯಕ್ತಪಡಿಸಿದರು.
‘ಮಸೂದೆಗೆ ಸಂಸತ್ತಿನಲ್ಲಿ ಅಂಗೀಕಾರ ಸಿಕ್ಕಿದ್ದರೂ ಅಧಿಕಾರಿಗಳು ಏಕೆ ಹಿಂದೇಟು ಹಾಕುತ್ತಿದ್ದಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ಈ ಸಮುದಾಯ ಗಂಗಾಮತಸ್ಥ ಸಮುದಾಯದ ವ್ಯಾಪ್ತಿಗೆ ಬರುತ್ತದೆ ಎಂದು ಗೊಂದಲ ಸೃಷ್ಟಿಸುತ್ತಿದ್ದಾರೆ. ಆದರೆ, ಸರ್ಕಾರದ ಆದೇಶಗಳಲ್ಲಿ ಎಲ್ಲಿಯೂ ಈ ಬಗ್ಗೆ ಉಲ್ಲೇಖ ಇಲ್ಲ. ಇದರ ಹಿಂದೆ ರಾಜಕೀಯ ಷಡ್ಯಂತ್ರ ಇರಬಹುದು’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅನುಮಾನ ವ್ಯಕ್ತಪಡಿಸಿದರು.
ಅಧಿಕಾರಿಗಳ ಎಡವಟ್ಟಿನಿಂದಾಗಿ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣಪತ್ರ ಪಡೆಯಲು ತಳವಾರ, ಪರಿವಾರ ಸಮುದಾಯದವರಿಗೆ ಸಾಧ್ಯವಾಗುತ್ತಿಲ್ಲ. ಇದರಿಂದ ಅವರಿಗೆ ಮತ್ತೆ ಅನ್ಯಾಯವಾಗಿದೆ. ಹೀಗಾಗಿ, ಪ್ರವರ್ಗ–1ರಿಂದ ತೆಗೆದು ಮತ್ತೆ ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದರು.
ಈ ಗೊಂದಲ ಬಗೆಹರಿಸುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ಅವರಿಗೂ ಮನವರಿಕೆ ಮಾಡಿಕೊಡುತ್ತೇನೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸುತ್ತೇನೆ ಎಂದರು.