ಮೈಸೂರು: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಆರೋಪದ ಮೇಲೆ ನಂಜನಗೂಡು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸೇರಿದಂತೆ ಜಿಲ್ಲೆಯ ಏಳು ಮುಖಂಡರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಂ.ಸುಧೀರ್ (ತಿ.ನರಸೀಪುರ), ಮಧು ಸುಬ್ಬಣ್ಣ (ಕಳಲೆ), ನಂಜನಗೂಡು ತಾ.ಪಂ ಅಧ್ಯಕ್ಷ ಬಿ.ಎಸ್.ಮಹದೇವಪ್ಪ, ಸದಸ್ಯರಾದ ಶಿವಣ್ಣ, ಗೀತಾ, ಎಸ್.ದೇವಮ್ಮ, ಮಾದಪ್ಪ ಅವರ ಮೇಲೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಈ ಕ್ರಮ ಕೈಗೊಂಡಿದೆ.
ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಡಿದ ಶಿಫಾರಸಿನ ಮೇರೆಗೆ ಈ ಸದಸ್ಯರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.
‘ನಂಜನಗೂಡು ಉಪಚುನಾವಣೆಯಲ್ಲಿ ಈ ಸದಸ್ಯರು ಬಿಜೆಪಿ ಮುಖಂಡ ವಿ.ಶ್ರೀನಿವಾಸಪ್ರಸಾದ್ ಜೊತೆ ಗುರುತಿಸಿಕೊಂಡಿದ್ದರು. ಈ ಸಂಬಂಧ ನಾನು ಕೆಪಿಸಿಸಿಗೆ ವರದಿ ನೀಡಿದ್ದೆ’ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಜೆ.ವಿಜಯಕುಮಾರ್ ತಿಳಿಸಿದರು.