ಮೈಸೂರು: ‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ’ ಎಂದು ಕಾಂಗ್ರೆಸ್ ನಗರ ಸಮಿತಿ ವಕ್ತಾರ ಎಸ್.ರಾಜೇಶ್ ತಿಳಿಸಿದರು.
‘ಮಾಜಿ ಮುಖ್ಯಮಂತ್ರಿ, ಸಾಮಾಜಿಕ ನ್ಯಾಯದ ಪ್ರತಿಪಾದಕ ಹಾಗೂ ಮುತ್ಸದ್ದಿಯಾದ ಸಿದ್ದರಾಮಯ್ಯ ಅವರನ್ನು ಅವಹೇಳನ ಮಾಡಿರುವುದು ಸರಿಯಲ್ಲ. ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳುವುದಕ್ಕಾಗಿ ನಮ್ಮ ಪಕ್ಷದ ನಾಯಕರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ’ ಎಂದು ಟೀಕಿಸಿದರು.
‘ರವಿ, ಇದೇ ಧೋರಣೆ ಮುಂದುವರಿಸಿದರೆ ಅವರು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಾಗ ಕಪ್ಪುಪಟ್ಟಿ ಪ್ರದರ್ಶಿಸಿ ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ತಿಳಿಸಿದರು.
ಪಕ್ಷದ ಅಜೀಜ್ಸೇಠ್ ಬ್ಲಾಕ್ ಅಧ್ಯಕ್ಷ ಸೈಯದ್ ಎಕ್ಬಾಲ್, ಮುಖಂಡರಾದ ಕುರುಬಾರಹಳ್ಳಿ ಪ್ರಕಾಶ್, ರಾಕೇಶ್ಕುಮಾರ್ ಹಾಗೂ ದೀಪು ಇದ್ದರು.