ಖಾನಾಪುರ (ಬೆಳಗಾವಿ ಜಿಲ್ಲೆ): ‘ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಭ್ಯವಾದ ಸಾಕ್ಷ್ಯಾಧಾರಗಳ ಮೇಲೆ ಆರೋಪಿ ನವೀನಕುಮಾರನನ್ನು ಬಂಧಿಸಿದ್ದೇವೆ. ಈ ವಿಷಯದಲ್ಲಿ ಯಾರನ್ನೂ ಬಲಿಪಶು ಮಾಡುತ್ತಿಲ್ಲ’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್ ರಾಜು ಸ್ಪಷ್ಟಪಡಿಸಿದರು.
ಪಟ್ಟಣದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ವಿವಿಧ ಆಯಾಮಗಳಿಂದ ಪ್ರಕರಣದ ತನಿಖೆ ನಡೆಸಲಾಗುತ್ತಿದೆ. ತನಿಖೆ ಇನ್ನೂ ಮುಂದುವರಿದಿದೆ’ ಎಂದು ಹೇಳಿದರು.
‘ಬೆಳಗಾವಿಯಲ್ಲಿ ಅಕ್ರಮ ಕಸಾಯಿಖಾನೆಗಳಿದ್ದರೆ, ಅವುಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು. ಬಾಂಗ್ಲಾದೇಶಿಯರು ಇದ್ದಾರೆ ಎನ್ನುವುದರ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ’ ಎಂದು ಹೇಳಿದರು.
‘ಐಪಿಎಸ್ ಅಧಿಕಾರಿ ಆರ್.ಪಿ.ಶರ್ಮಾ, ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ಐಪಿಎಸ್ ಅಧಿಕಾರಿಗಳ ಸಂಘದ ಮೂಲಕ ವ್ಯಕ್ತಪಡಿಸಿದ್ದು ತಪ್ಪು. ಅಭದ್ರತೆಯ ಸನ್ನಿವೇಶ ರಾಜ್ಯದಲ್ಲಿ ನಿರ್ಮಾಣವಾಗಿಲ್ಲ’ ಎಂದು ನೀಲಮಣಿ ಎನ್ ರಾಜು ಹೇಳಿದರು.