ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಸಿದ್ಧತೆ ಕುರಿತು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಮಂಗಳವಾರ ಉನ್ನತ ಮಟ್ಟದ ಸಮಿತಿ ಸಭೆ ನಡೆಯಲಿದೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಆರಂಭವಾಗಲಿರುವ ಸಭೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಸಂಸದ ಪ್ರತಾಪಸಿಂಹ, ಮೈಸೂರು ಜಿಲ್ಲೆಯ ಶಾಸಕರು, ಮೇಯರ್ ತಸ್ನೀಂ, ಜಿಲ್ಲಾಧಿಕಾರಿ ಬಿ.ಶರತ್ ಪಾಲ್ಗೊಳ್ಳಲಿದ್ದಾರೆ.
ದಸರಾ ಮಹೋತ್ಸವ ಈ ಬಾರಿ ಅ.17ರಿಂದ 26ರವರೆಗೆ ನಡೆಯಲಿದೆ. ಕೋವಿಡ್–19 ಕಾರಣದಿಂದಾಗಿ ಈ ಬಾರಿ ಸರಳವಾಗಿ ಆಚರಿಸಲಾಗುತ್ತಿದ್ದು, ಯಾವ ರೀತಿ ಜಂಬೂಸವಾರಿ ನಡೆಸಬೇಕೆಂಬ ವಿಚಾರದ ಬಗ್ಗೆ ಸಭೆಯಲ್ಲಿ ಪ್ರಮುಖವಾಗಿ ಚರ್ಚೆ ಆಗುವ ನಿರೀಕ್ಷೆ ಇದೆ.