ಮೈಸೂರು: ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ನೀಡಿರುವ ಶಿಫಾರಸ್ಸಿನ ಅನ್ವಯವೇ ದಸರಾ ಮಹೋತ್ಸವ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಪ್ಪಿಗೆ ನೀಡಿದ್ದಾರೆ ಎಂದು ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಈ ಸಂಬಂಧ ಶನಿವಾರ ಅಧಿಕಾರಿಗಳ ಜೊತೆ ಸಭೆ ನಡೆಸಿ ಶಿಫಾರಸ್ಸುಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲು ಕ್ರಮ ವಹಿಸುವಂತೆ ಸೂಚನೆ ನೀಡಿದರು. ಕಾರ್ಯಕ್ರಮದ ವೇಳೆ ಕಟ್ಟುನಿಟ್ಟಾಗಿ ಸುರಕ್ಷತೆ ಕ್ರಮಗಳನ್ನು ಅನುಸರಿಸಬೇಕು. ಯಾವುದೇ ಲೋಪ ಉಂಟಾಗಬಾರದು ಎಂದು ತಾಕೀತು ಮಾಡಿದರು.
ಪ್ರಮುಖವಾಗಿ ಜಿಲ್ಲಾ ವೈದ್ಯಾಧಿಕಾರಿ ಡಾ.ವೆಂಕಟೇಶ್ ಅವರನ್ನು ತರಾಟೆಗೆ ತೆಗೆದುಕೊಂಡರು. ಏನಾದರೂ ಎಡವಟ್ಟು ಸಂಭವಿಸಿದರೆ ತಾವೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಶನಿವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ನೇತೃತ್ವದಲ್ಲಿ ಸಭೆ ನಡೆಯಬೇಕಿತ್ತು. ಆದರೆ, ಅವರು ಅನುಪಸ್ಥಿತಿಯಲ್ಲಿ ಸಚಿವರೇ ಸಮಿತಿಯ ಶಿಫಾರಸುಗಳ ಬಗ್ಗೆ ಚರ್ಚಿಸಿದರು.
ಸಂಸದ ಪ್ರತಾಪಸಿಂಹ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಇದ್ದರು.
ಈ ನಡುವೆ ಅರಮನೆ ಅಂಗಳದಲ್ಲಿ ಗಜಪಡೆ ಅಭ್ಯಾಸ ಮುಂದುವರಿದಿದೆ. ಕ್ಯಾಪ್ಟನ್ ಅಭಿಮನ್ಯು ಆನೆಗೆ ಭಾರ ಹೊರಿಸುವ ತಾಲೀಮು ನೀಡಲಾಗುತ್ತಿದೆ.