ಕೊಳ್ಳೇಗಾಲ: ನೂತನವಾಗಿ ನಿರ್ಮಾಣವಾಗುತ್ತಿರುವ ಆದರ್ಶ ಶಾಲೆಯ ಕಟ್ಟಡದ ಕಾಮಗಾರಿ ಒಂದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಸಂಸದ ಆರ್.ಧ್ರುವನಾರಾಯಣ ಹೇಳಿದರು.
ಕಟ್ಟಡ ಕಾಮಗಾರಿ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ಆದರ್ಶ ಶಾಲೆಯ ತರಗತಿಗಳನ್ನು ಎಂ.ಜಿ.ಎಸ್.ವಿ ಕಾಲೇಜಿನ ಹಿಂಭಾಗದ ಕಟ್ಟಡದಲ್ಲಿ ನಡೆಸಲಾಗುತ್ತಿದೆ. ಕಟ್ಟಡ ಕಾಮಗಾರಿ ಪೂರ್ಣಗೊಂಡ ಬಳಿಕ ಹೊಸ ಕಟ್ಟಡಕ್ಕೆ ಶಾಲೆಯನ್ನು ಸ್ಥಳಾಂತರಿಸಲಾಗುತ್ತದೆ ಎಂದರು.
‘ಆದರ್ಶ ಶಾಲೆಯಲ್ಲಿ 400ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಬಿಸಿಲು, ಮಳೆಯನ್ನು ಲೆಕ್ಕಿಸದೆ ಪಾಠ ಕೇಳುವ ಸ್ಥಿತಿ ಇತ್ತು. ₹6 ಕೋಟಿ ವೆಚ್ಚದಲ್ಲಿ ಕಟ್ಟಡ ಕಾಮಗಾರಿ ನಡೆಯುತ್ತಿದೆ. 35 ಕೊಠಡಿಗಳಿದ್ದು, ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಗ್ರಂಥಾಲಯ, ಆಟದ ಮೈದಾನ, ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದ್ದೇನೆ’ ಎಂದು ತಿಳಿಸಿದರು.
ಆದರ್ಶ ಶಾಲೆಯಲ್ಲಿ ಕೊಠಡಿ ಸಮಸ್ಯೆಯಿಂದ ಮಕ್ಕಳು ಮರದ ಕೆಳಗೆ ಕುಳಿತು ಪಾಠ ಕೇಳುತ್ತಿರುವ ಕುರಿತು ‘ಪ್ರಜಾವಾಣಿ’ ಪತ್ರಿಕೆಯಲ್ಲಿ
ವರದಿ ಪ್ರಕಟಗೊಂಡಿತ್ತು. ಇದಕ್ಕೆ ಸ್ಪಂದಿಸಿದ ಸಂಸದರು ಕಾಮಗಾರಿ ಪರಿಶೀಲಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಟಿ.ಶಿವಲಿಂಗಯ್ಯ, ನಗರಸಭೆ ಅಧ್ಯಕ್ಷ ಎಸ್.ರಮೇಶ್, ಉಪಾಧ್ಯಕ್ಷ ಶಿವಾನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷ, ಮಾಜಿ ಅಧ್ಯಕ್ಷ ಶಾಂತರಾಜು, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಮುಖಂಡರಾದ ಸುರೇಶ್, ಪ್ರಕಾಶ್ ಮೊದಲಾದವರು ಇದ್ದರು.