ಮೈಸೂರು: ‘ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪೌರಕಾರ್ಮಿಕರಿಗೆ ಶೇ 5ರಷ್ಟು ಮೀಸಲಾತಿ ನೀಡಬೇಕು’ ಎಂದು ಮೈಸೂರು ಮಹಾನಗರ ಪಾಲಿಕೆಯ ಕಾಯಂ ಪೌರಕಾರ್ಮಿಕರ ಹಾಗೂ ಗುತ್ತಿಗೆ ಪೌರಕಾರ್ಮಿಕರ ಮಹಾ ಸಂಘದ ಉನ್ನತ ಸಮಿತಿ ಅಧ್ಯಕ್ಷ ಎನ್.ಮಾರ ಶುಕ್ರವಾರ ಇಲ್ಲಿ ಆಗ್ರಹಿಸಿದರು.
‘ಪುರಸಭೆ, ಪಟ್ಟಣ ಪಂಚಾಯಿತಿ, ನಗರಸಭೆ, ಮಹಾನಗರ ಪಾಲಿಕೆಗಳಿಗೆ ಸರ್ಕಾರ ನಾಮನಿರ್ದೇಶನ ಮಾಡುವಾಗಲೂ ಸಹ ಪೌರಕಾರ್ಮಿಕ ಸಮುದಾಯಕ್ಕೂ ಅವಕಾಶ ಕೊಡಬೇಕು’ ಎಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
‘ಪೌರಕಾರ್ಮಿಕ ಸಮುದಾಯಕ್ಕೆ ರಾಜಕೀಯ ಸ್ಥಾನಮಾನ ದೊರಕಬೇಕಾದರೆ ಮೀಸಲಾತಿ ಅತ್ಯಗತ್ಯ’ ಎಂದು ಪ್ರತಿಪಾದಿಸಿದರು.
‘ಪೌರಕಾರ್ಮಿಕರ ಸಂಘದ ರಾಜ್ಯ ಅಧ್ಯಕ್ಷ, ಮಾಜಿ ಮೇಯರ್ ನಾರಾಯಣ್ ಕುರಿತು ‘ಪೌರಬಂಧು’ ಕೃತಿ ಬಿಡುಗಡೆ ಮಾಡುತ್ತಿರುವುದು ಸ್ವಾಗತಾರ್ಹ. ರಾಜ್ಯದ ಪೌರಕಾರ್ಮಿಕರು ಹೆಮ್ಮೆಪಡುವ ಸಂಗತಿಯಿದು’ ಎಂದು ಹೇಳಿದರು.
ಉನ್ನತ ಸಮಿತಿಯ ಕಾರ್ಯದರ್ಶಿ ಶ್ರೀನಿವಾಸ್, ಅಧ್ಯಕ್ಷ ಮೋಹನ್ಕುಮಾರ್, ಪ್ರಧಾನ ಕಾರ್ಯದರ್ಶಿ ಎಸ್.ಗಣೇಶ್ ಪತ್ರಿಕಾಗೋಷ್ಠಿಯಲ್ಲಿದ್ದರು.