ಮೈಸೂರು: ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯ ಮೇಲೆ ಹೆಚ್ಚುತ್ತಿರುವ ಹಲ್ಲೆಯನ್ನು ಖಂಡಿಸಿ ಹಾಗೂ ಸೂಕ್ತ ರಕ್ಷಣೆಗೆ ಆಗ್ರಹಿಸಿ ಎಐಡಿಎಸ್ಒ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
ವೈದ್ಯರು, ವೈದ್ಯಕೀಯ ಸಿಬ್ಬಂದಿ, ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಮಂದಿ ಪ್ರತಿಭಟನೆಯನ್ನು ಬೆಂಬಲಿಸಿ, ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಚಿತ್ರಗಳನ್ನು ಅಪ್ಲೋಡ್ ಮಾಡಿದರು.
ವೈದ್ಯಕೀಯ ಸಿಬ್ಬಂದಿಗೆ ಸೂಕ್ತ ರಕ್ಷಣೆಗೆ ಆಗ್ರಹಿಸಿ ಅವರು ತಾವಿದ್ದ ಸ್ಥಳದಲ್ಲೇ ಭಿತ್ತಿಪತ್ರ ಪ್ರದರ್ಶಿಸಿದರು.
ಆರೋಗ್ಯ ವಲಯಕ್ಕೆ ಸೂಕ್ತ ರೀತಿಯಲ್ಲಿ ಮೂಲಸೌಕರ್ಯಗಳನ್ನು ಒದಗಿಸಿಕೊಡಬೇಕು ಎಂದು ಅವರು ಇದೇ ವೇಳೆ ಆಗ್ರಹಿಸಿದರು.
ಬಾಬಾ ರಾಮದೇವ್ ಅವರು ಅವೈಜ್ಞಾನಿಕವಾದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದರಿಂದ ಜನಸಾಮಾನ್ಯರು ದಾರಿ ತಪ್ಪುತ್ತಿದ್ದಾರೆ. ಸರ್ಕಾರ ಕೂಡಲೇ ಇವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಕುರಿತು ಆನ್ಲೈನ್ ಮೂಲಕ ಸಹಿ ಸಂಗ್ರಹಿಸಿಪ್ರಧಾನಮಂತ್ರಿ ಅವರಿಗೆ ಕಳುಹಿಸಲು ತೀರ್ಮಾನಿಸಲಾಗಿದೆ ಎಂದು ಎಐಡಿಎಸ್ಓ ನ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ್ ತಿಳಿಸಿದ್ದಾರೆ.