ಮೈಸೂರು: ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಬೇಕು. ಆರು ತಿಂಗಳೊಳಗೆ ರಾಮ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಶಾಸಕ ಎಸ್.ಎ.ರಾಮದಾಸ್ ಇಲ್ಲಿ ಮನವಿ ಮಾಡಿದರು.
ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಜನರ ಅಭಿಲಾಷೆಯಂತೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದಿರುವುದು ಸಂತಸದ ವಿಷಯ. ಮೋದಿ ಅವರು ಪ್ರಮಾಣ ವಚನದ ಜೊತೆಗೆ 1,000 ದಿನಗಳ ಕಾರ್ಯ ಯೋಜನೆಯನ್ನು ಪ್ರಕಟಿಸಿರುವುದು ಅವರ ಬದ್ಧತೆಗೆ ಹಿಡಿದ ಕನ್ನಡಿ’ ಎಂದು ಹೇಳಿದರು.
ಪಕ್ಷದ ವತಿಯಿಂದ ದಿನಕ್ಕೊಂದು ಗಿಡದಂತೆ ಪ್ರತಿ ಭಾನುವಾರ ಕೆ.ಆರ್.ಕ್ಷೇತ್ರದಲ್ಲಿ ಗಿಡ ನೆಡಲಾಗುವುದು. ಜತೆಗೆ ಸ್ವಚ್ಛತಾ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗುವುದು ಎಂದು ಸದಸ್ಯರು ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಗೋ ಪೂಜೆ ಹಾಗೂ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.