ಮೈಸೂರು: ‘ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡದವರಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸದಿದ್ದರೆ ರಾಜ್ಯದಾದ್ಯಂತ ವಾಲ್ಮೀಕಿ ಜಯಂತಿಯನ್ನು ಬಹಿಷ್ಕರಿಸಲಾಗುವುದು’ ಎಂದು ರಾಜ್ಯ ನಾಯಕರ ಹಿರಕ್ಷಣಾ ವೇದಿಕೆ ಅಧ್ಯಕ್ಷ ದ್ಯಾವಪ್ಪನಾಯಕ ಎಚ್ಚರಿಕೆ ನೀಡಿದರು.
ಅ.9ರಂದು ಆಯೋಜಿಸಲಿರುವ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಸಮಾಜದ ವಾಲ್ಮೀಕಿ ಶ್ರೀಗಳು ಎಸ್.ಸಿ., ಎಸ್.ಟಿ. ಮೀಸಲಾತಿ ಹೆಚ್ಚಿಸುವಂತೆ 224 ದಿನಗಳಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ. ಆದರೆ, ಇದುವರೆಗೂ ಬೇಡಿಕೆ ಈಡೇರಿಲ್ಲ. ಹೀಗಾಗಿ, ಶ್ರೀಗಳು ಸೆ.28ರವರೆಗೆ ಸರ್ಕಾರಕ್ಕೆ ಅಂತಿಮ ಗಡುವನ್ನು ನೀಡಿದ್ದಾರೆ’ ಎಂದರು.
‘ಬೇಡಿಕೆ ಈಡೇರದಿದ್ದರೆ ಶ್ರೀಗಳು ಧರಣಿ ನಡೆಸುತ್ತಿರುವ ಸ್ವಾತಂತ್ರ್ಯ ಉದ್ಯಾನದಲ್ಲೇ ವಾಲ್ಮೀಕಿ ಜಯಂತಿ ಆಚರಿಸುತ್ತೇವೆ. ಸರ್ಕಾರದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ. ರಾಜ್ಯದಾದ್ಯಂತ ಯಾವುದೇ ಶಾಸಕರು, ಸಚಿವರು ಸರ್ಕಾರದ ವಾಲ್ಮೀಕಿ ಜಯಂತಿ ಕಾರ್ಯಕ್ರಮಗಳಲ್ಲಿ ಭಾಗವಹಿಸದಂತೆ ತಡೆದು ಕಪ್ಪು ಬಾವುಟ ಪ್ರದರ್ಶಿಸುತ್ತೇವೆ’ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನಾ ಸಮನ್ವಯ ಅಧಿಕಾರಿ ಪ್ರಭಾ ಅರಸ್ ಅವರಿಗೆ ಮನವಿ ಸಲ್ಲಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಲ್ಲೇಶ್, ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಹುಣಸೂರು, ಮುಖಂಡರಾದ ಉದ್ಬೂರು ಮಹಾದೇವಸ್ವಾಮಿ, ಕಡಕೊಳ ಕುಮಾರಸ್ವಾಮಿ, ಚನ್ನನಾಯಕ, ಮಧುವಿನ ಚಂದ್ರ, ಕಾಟೂರು ದೇವರಾಜು, ಜಯರನಾಯ್ಕ, ಕೆಂಪನಾಯಕ, ಕೃಷ್ಣ ಹಾಜರಿದ್ದರು.