ಗುರುವಾರ , ಮಾರ್ಚ್ 23, 2023
30 °C
ಕರಾಮುವಿ ಸ್ಪರ್ಧಾತ್ಮಕ ಕೇಂದ್ರದಲ್ಲಿ ತರಬೇತಿ ಶಿಬಿರದ ಸಮಾರೋಪ ಸಮಾರಂಭ

ಡಿಜಿಟಲ್‌ ಜ್ಞಾನ ಅತ್ಯಗತ್ಯ: ಎಂ.ಎಸ್.ಮಹಾಬಲೇಶ್ವರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಬ್ಯಾಂಕಿಂಗ್ ಕ್ಷೇತ್ರದ ಉದ್ಯೋಗಕಾಂಕ್ಷಿಗಳಿಗೆ ಮಾಹಿತಿ ತಂತ್ರಜ್ಞಾನದ ಅರಿವೂ ಇರಬೇಕು ಎಂದು ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಸ್.ಮಹಾಬಲೇಶ್ವರ ತಿಳಿಸಿದರು.

ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸೋಮವಾರ ನಡೆದ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಯ ಆನ್‍ಲೈನ್ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಾಂಪ್ರದಾಯಿಕವಾಗಿ ಬ್ಯಾಂಕುಗಳ ಇತಿಹಾಸ ಓದಿಕೊಂಡರೆ ನೇಮಕಾತಿ ಪರೀಕ್ಷೆಗಳಲ್ಲಿ ಯಶಸ್ಸು ಸಿಗುವುದು ಕಷ್ಟ. ಇದರ ಜತೆಗೆ, ಮಾಹಿತಿ ತಂತ್ರಜ್ಞಾನದ ಅರಿವನ್ನೂ ಹೊಂದಿರಬೇಕು ಎಂದು ಅವರು ಕಿವಿಮಾತು ಹೇಳಿದರು.

ಬ್ಯಾಂಕುಗಳಲ್ಲಿ ಡಿಜಿಟಲ್‌ ವ್ಯವಹಾರ ಹೆಚ್ಚಾಗುತ್ತಿರುವುದರಿಂದ ಬ್ಯಾಂಕುಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಇತ್ತೀಚೆಗೆ ನಡೆದಿರುವ ಬ್ಯಾಂಕುಗಳ ವಿಲೀನ ಇದಕ್ಕೆ ಸಾಕ್ಷಿ. ಆದಾಗ್ಯೂ, ದೇಶದಲ್ಲಿ ಉದ್ಯೋಗ ಸೃಷ್ಟಿಸುವಲ್ಲಿ ಬ್ಯಾಂಕಿಂಗ್ ಕ್ಷೇತ್ರ 2ನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿ ಭಾರತೀಯ ಸೇನೆ ಇದ್ದರೆ, ಭಾರತೀಯ ರೈಲ್ವೆ 3ನೇ ಸ್ಥಾನದಲ್ಲಿದೆ ಎಂದರು.

ಎಡಿಜಿಪಿ ಭಾಸ್ಕರ್‌ರಾವ್ ಮಾತನಾಡಿ, ‘ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವವರು ಇಂಟರ್‌ನೆಟ್‌ನಲ್ಲಿ ಎಲ್ಲವೂ ಸಿಗುತ್ತದೆ ಎಂದು ಸ್ವಯಂ ಅಧ್ಯಯನ ಕೈಗೊಂಡು ಎಡವುತ್ತಿದ್ದಾರೆ. ಆನ್‌ಲೈನ್‌ನಲ್ಲಿ ಮಾಹಿತಿ ದೊರೆತರೂ, ಕ್ರಮಬದ್ಧವಾದ ಅಧ್ಯಯನಕ್ಕೆ ಆಫ್‌ಲೈನ್‌ನಲ್ಲಿ ತರಬೇತಿ ಬೇಕೇ ಬೇಕು’ ಎಂದು ಹೇಳಿದರು.

ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಮೂಲಕ ಅತ್ಯುತ್ತಮ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು.

ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಮಾತನಾಡಿ, ‘ಇಡೀ ವಿಶ್ವವಿದ್ಯಾಲಯವನ್ನು ಡಿಜಿಟಲೀಕರಣ ಮಾಡಲಾಗಿದೆ. ಪಿ.ಯು ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ತೆಗೆದುಕೊಳ್ಳುವ ಸಾಮಾನ್ಯ ಪರೀಕ್ಷೆಗೆ (ಕೆ-ಸಿಇಟಿ) ಆನ್‍ಲೈನ್ ತರಬೇತಿ ನೀಡಲು ನಿರ್ಧರಿಸಲಾಗಿದೆ’ ಎಂದರು.

ವಿದುಷಿ ಶ್ರೀರಂಜಿನಿವಿವೇಕ್,  ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಎಂ.ಮಹದೇವನ್, ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.