ಹುಣಸೂರು: ಕೋವಿಡ್ –19 ಭೀತಿಯಿಂದಾಗಿ ಜಿಲ್ಲೆಯಲ್ಲಿ ಸಭೆ, ಸಮಾರಂಭಗಳನ್ನು ಏರ್ಪಡಿಸದಂತೆ ಜಿಲ್ಲಾಡಳಿತ ಆದೇಶ ನೀಡಿದೆ. ಆದರೆ, ಇದನ್ನು ಗಾಳಿಗೆ ತೂರಿರುವ ಅಬಕಾರಿ ಇಲಾಖೆ ಅಧಿಕಾರಿಗಳು ಆರತಕ್ಷತೆ ಕಾರ್ಯಕ್ರಮ ಏರ್ಪಡಿಸಿದ್ದು, ಕಾರ್ಯಕ್ರಮಕ್ಕೆ ಆಗಮಿಸಿದವರಿಗೆ ಬಾಡೂಟ ಹಾಕಿಸಿದ್ದಾರೆ.
ಅಬಕಾರಿ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿರುವ ವಧು–ವರ, ನಗರದ ಹೊರ ವಲಯದ ಕಲ್ಯಾಣ ಮಂಟಪದಲ್ಲಿ ಆರತಕ್ಷತೆ ಕಾರ್ಯಕ್ರಮ ಏರ್ಪಡಿಸಿದ್ದರು. ಇದರಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಅಬಕಾರಿ ಇಲಾಖೆ ಅಧಿಕಾರಿಗಳು ಸರ್ಕಾರಿ ವಾಹನದಲ್ಲೇ ಬಂದು ಬಾಡೂಟ ಸವಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ಬಸವರಾಜ್, ‘ಜಿಲ್ಲಾಡಳಿತ ಹೊರಡಿಸಿರುವ ಆದೇಶವನ್ನು ಅಧಿಕಾರಿಗಳು ಪಾಲಿಸಬೇಕಿತ್ತು. ಈ ಹಂತದಲ್ಲಿ ಅವರು ಎಡವಿದ್ದಾರೆ. ನವ ವಧು– ವರರು ಇತ್ತೀಚೆಗೆ ಧರ್ಮಸ್ಥಳದಲ್ಲಿ ವಿವಾಹವಾಗಿದ್ದರು. ಕೋವಿಡ್–19 ಬಗ್ಗೆ ಜಾಗೃತಿ ಮೂಡಿಸಬೇಕಾದಅಧಿಕಾರಿಗಳು, ಮಾರ್ಚ್ ನಂತರದಲ್ಲಿ ಆರತಕ್ಷತೆ ಇಟ್ಟುಕೊಳ್ಳಬಹುದಿತ್ತು. ಇಲ್ಲವೇ ಕುಟುಂಬದ ಕೆಲವೇ ಸದಸ್ಯರೊಂದಿಗೆ ಕಾರ್ಯಕ್ರಮ ನಡೆಸಬಹುದಿತ್ತು’ ಎಂದರು.
ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ, ಈ ಬಗ್ಗೆ ಎಲ್ಲರಿಗೂ ಸೂಚನೆ ನೀಡಲಾಗುವುದು ಎಂದು ಅವರು ತಿಳಿಸಿದರು.