ಮೈಸೂರು: ‘ಕೃಷಿಕರ ಆದಾಯ ದ್ವಿಗುಣಗೊಳಿಸಬೇಕಾದರೆ ಮಾರುಕಟ್ಟೆ ವಿಸ್ತರಿಸಬೇಕು. ಹೆಚ್ಚಿನ ಇಳುವರಿ ಬರುವಂತೆ ಮಾಡಿ, ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ಸಿಗುವಂತೆ ನೋಡಿಕೊಳ್ಳಬೇಕು’ ಎಂದು ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯದ ಕೃಷಿ ವ್ಯವಹಾರ ನಿರ್ವಹಣಾ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಎಂ.ಎಸ್. ಗಣಪತಿ ಹೇಳಿದರು.
ಮೈಸೂರು ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ಸಂಸ್ಥೆ ವತಿಯಿಂದ ‘ಸ್ವಾತಂತ್ರ್ಯ ಅಮೃತ ಮಹೋತ್ಸವ’ದ ಪ್ರಯುಕ್ತ ಇಲ್ಲಿನ ಮಾನಸಗಂಗೋತ್ರಿಯ ರಾಣಿ ಬಹದ್ಧೂರ್ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ‘ಭಾರತದಲ್ಲಿ ಕೃಷಿ ಮಾರುಕಟ್ಟೆಗಳನ್ನು ಏಕೀಕರಿಸುವುದು–ಸಮಸ್ಯೆಗಳು ಮತ್ತು ಸವಾಲುಗಳು’ ಕುರಿತ ರಾಷ್ಟ್ರೀಯ ವಿಚಾರಸಂಕಿಣರಣದಲ್ಲಿ ಅವರು ಮಾತನಾಡಿದರು.
‘ರೈತರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಉತ್ಪನ್ನಗಳನ್ನು ಖರೀದಿಸಬೇಕು’ ಎಂದರು.
‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೃಷಿಕರಿಗೆ ಅನುಕೂಲಕರ ವಾತಾವರಣ ನಿರ್ಮಿಸಿಕೊಡಬೇಕು. ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಿದರೆ ಮುಂದಿನ ಜೀವನ ಕಷ್ಟಕರವಾಗಲಿದೆ’ ಎಂದು ಹೇಳಿದರು.
ವಿಚಾರಸಂಕಿರಣವನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ. ಹೇಮಂತ್ಕುಮಾರ್ ಉದ್ಘಾಟಿಸಿದರು. ಕೆಎಎಸ್ ಹಿರಿಯ ಶ್ರೇಣಿ ಅಧಿಕಾರಿ ಡಾ.ಡಿ.ಬಿ. ನಟೇಶ್, ಎನ್ಎಸ್ಯುಎಎಂಐ ನಿರ್ದೇಶಕ ಡಾ.ಎಚ್.ಎಂ. ಚಂದ್ರಶೇಖರ್, ಡಾ.ಮೀರಾ, ಪ್ರೊ.ಮಂಗಳಾ ಹಾಜರಿದ್ದರು.