ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಪಾಳೇಗಾರ ಮಾರ ನಾಯಕರ ಪ್ರತಿಮೆ ಸ್ಥಾಪಿಸಬೇಕು ಎಂದು ಆಗ್ರಹಿಸಿ ಮೈಸೂರು ನಾಯಕರ ಪಡೆ ಸಂಘಟನೆಯ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟಿಸಿದರು.
ಮೈಸೂರಿನ ಮೂಲ ನಿವಾಸಿಗಳ ಪಾಳೇಗಾರ ಕಾರ್ಗಳ್ಳಿ ಮಾರ ನಾಯಕರ ಪ್ರತಿಮೆ ಸ್ಥಾಪಿಸುವ ಮೂಲಕ, ನಾಯಕ ಜನಾಂಗದ ಇತಿಹಾಸ ಪುರುಷನಿಗೆ ಗೌರವ ಸಲ್ಲಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ವಕೀಲ ರಾಮಕೃಷ್ಣ, ಟೆನ್ನಿಸ್ ಗೋಪಿ, ದ್ಯಾವಪ್ಪ ನಾಯಕ, ಬೆಟ್ಟ ಶ್ರೀಧರ್, ರಮ್ಮನಹಳ್ಳಿ ಸೋಮಣ್ಣ, ಗೋವಿಂದರಾಜು, ಪ್ರಕಾಶ್, ಯಡಕೊಳ ನಾಗೇಂದ್ರ, ಹಿನಕಲ್ ಚಂದ್ರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
₹ 12 ಸಾವಿರ ನಿಗದಿಗೊಳಿಸಿ
ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹ 12 ಸಾವಿರ ವೇತನ ನಿಗದಿಗೊಳಿಸುವ ಜೊತೆಗೆ ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಎಐಯುಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಕಾರ್ಯಕರ್ತೆಯರ ಆರೋಗ್ಯ ತಪಾಸಣೆ ಮಾಡಬೇಕು. ಮಾಸ್ಕ್, ಹ್ಯಾಂಡ್ ಗ್ಲೌಸ್, ಫೇಸ್ ಶೀಲ್ಡ್ ಮತ್ತು ಸ್ಯಾನಿಟೈಸರ್ ಸೇರಿದಂತೆ ಇನ್ನಿತರೆ ವೈದ್ಯಕೀಯ ಸಲಕರಣೆಗಳನ್ನು ನೀಡಬೇಕು. ಕೋವಿಡ್ ವಿಶೇಷ ಪ್ರೋತ್ಸಾಹ ಧನವನ್ನು ಇನ್ನೂ ತಲುಪದಿರುವ ಆಶಾಗಳಿಗೆ ಪಾವತಿಯಾಗುವಂತೆ ಕ್ರಮ ಕೈಗೊಳ್ಳಿ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.
ನಮ್ಮ ಬೇಡಿಕೆಯನ್ನು ಈಡೇರಿಸದಿದ್ದರೇ ಸೆ.23ರ ಬುಧವಾರದಿಂದ ಬೆಂಗಳೂರಿನಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂಬ ಎಚ್ಚರಿಕೆಯನ್ನು ಪ್ರತಿಭಟನಕಾರರು ಈ ಸಂದರ್ಭ ನೀಡಿದರು.
ಪಿ.ಎಸ್.ಸಂಧ್ಯಾ, ಜಿ.ಎಸ್.ಸೀಮಾ, ಮಂಜುಳಾ, ಲಕ್ಷ್ಮೀ, ಸುಧಾ, ಸಿದ್ದಮ್ಮ, ಸುಮಿತ್ರಾ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಅತಿಥಿ ಉಪನ್ಯಾಸಕರ ಧರಣಿ
ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಬೇಕು. ಲಾಕ್ಡೌನ್ ಅವಧಿಯಲ್ಲಿನ ಗೌರವಧನ ಬಿಡುಗಡೆ ಮಾಡಬೇಕು. ಪ್ರಸಕ್ತ ಶೈಕ್ಷಣಿಕ ಸಾಲಿಗೂ ಮುಂದುವರಿಸಬೇಕು ಎಂದು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯ ಮೈಸೂರು ಜಿಲ್ಲಾ ಸಮಿತಿ ನಡೆಸುತ್ತಿರುವ ಪ್ರತಿಭಟನೆ 11ನೇ ಮಂಗಳವಾರ ಪೂರೈಸಿತು.
ಸಂಘಟನೆಯ ಉಪಾಧ್ಯಕ್ಷ ಬಾಬುರಾಜು, ಪ್ರಧಾನ ಕಾರ್ಯದರ್ಶಿ ಹನುಮಂತೇಶ್ ಪ್ರತಿಭಟನೆ ನೇತೃತ್ವ ವಹಿಸಿದ್ದರು.