ಮೈಸೂರು: ಕಳೆದ ಬಾರಿ ನಡೆದ ದಸರೆಯ ಅನುದಾನದಲ್ಲಿ ₹ 8.25 ಕೋಟಿ ಇನ್ನೂ ನೀಡಬೇಕಿದೆ. ₹ 10 ಕೋಟಿ ಒಳಗೆ ಆದಷ್ಟು ಸರಳವಾಗಿ ದಸರೆ ಆಚರಿಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಹೀಗಾಗಿ, ದುಂದುವೆಚ್ಚ ಮಾಡುವುದಿಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಶುಕ್ರವಾರ ತಿಳಿಸಿದರು.
‘ಸಾಂಸ್ಕೃತಿಕ ಕಾರ್ಯಕ್ರಮಗಳು 10 ದಿನ ನಡೆಯಬೇಕಿದೆ. ನೀವೇ ಪ್ರಾಯೋಜಕತ್ವ ವಹಿಸಿಕೊಳ್ಳುತ್ತೇವೆ ಎಂದು ಹೇಳಿದರೆ ಮುಖ್ಯಮಂತ್ರಿ ಬಳಿ ಹಣ ಕೇಳುವುದಿಲ್ಲ’ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
‘ಆರ್ಥಿಕ ಸ್ಪಂದನ’ ಕಾರ್ಯಕ್ರಮದಡಿ ₹ 39 ಸಾವಿರ ಕೋಟಿ ರೂಪಾಯಿ ಸಾಲವನ್ನು ರೈತರು, ಅತಿ ಸಣ್ಣ ಉದ್ಯಮಿಗಳಿಗೆ ನೀಡಲಾಗುತ್ತಿದೆ. ಈಗಾಗಲೇ ಬೆಂಗಳೂರು ವಿಭಾಗದಲ್ಲಿ ಚಾಲನೆ ನೀಡಲಾಗಿದೆ. ಮೈಸೂರು, ಕಲಬುರಗಿ ಹಾಗೂ ಬೆಳಗಾವಿ ವಿಭಾಗಗಳಲ್ಲಿ ಶೀಘ್ರವಾಗಿ ಪ್ರಾರಂಭಿಸಲಾಗುವುದು’ ಎಂದು ಹೇಳಿದರು.