ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ನ ಎರಡು ಸ್ಥಾನಗಳ ಪೈಕಿ ಒಂದು ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಬುಧವಾರ ನಡೆಯಲಿರುವ ಸಭೆಯಲ್ಲಿ ಅಂತಿಮ ನಿರ್ಧಾರ ಹೊರಬೀಳಲಿದೆ.
ರಾಜ್ಯಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿರುವ ಬಿ.ಎಂ.ಫಾರೂಕ್ ಅವರಿಗೆ ಟಿಕೆಟ್ ನೀಡುವುದು ಖಚಿತವಾಗಿದೆ. ಇನ್ನೊಂದು ಸ್ಥಾನಕ್ಕೆ ಜೆಡಿಎಸ್ ಬೆಂಗಳೂರು ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಹಾಗೂ ಹಿರಿಯ ಮುಖಂಡ ನಾರಾಯಣ ರಾವ್ ಅವರ ನಡುವೆ ತೀವ್ರ ಪೈಪೋಟಿ ಇದೆ.
ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಾದ ಎನ್.ಎಚ್.ಕೋನರಡ್ಡಿ, ಮಧು ಬಂಗಾರಪ್ಪ ಹಾಗೂ ವೈ.ಎಸ್.ವಿ.ದತ್ತ ಅವರ ಹೆಸರುಗಳೂ ಕೇಳಿಬಂದಿವೆ.
ಆದರೆ, ಸೋತ ಅಭ್ಯರ್ಥಿಗಳಿಗೆ ಮತ್ತೆ ಟಿಕೆಟ್ ನೀಡಿದರೆ ಅಸಮಾಧಾನ ಭುಗಿಲೇಳಬಹುದು ಎಂಬ ಕಾರಣಕ್ಕೆ ಅವರಿಗೆ ಪರ್ಯಾಯ ಸ್ಥಾನಮಾನ ಕಲ್ಪಿಸಲು ಪಕ್ಷದ ಮುಖಂಡರು ಚಿಂತನೆ ನಡೆಸಿದ್ದಾರೆ.