ಮೈಸೂರು: ಲಾಕ್ಡೌನ್ನಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಕಿರುನಾಟಕ ನಿರ್ದೇಶಕ ನವೀನ್ಕುಮಾರ್ (32) ಅವರು ಇಲ್ಲಿನ ತಮ್ಮ ನಿವಾಸದಲ್ಲಿ ಸೋಮವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇವರು ತಮ್ಮದೇಯಾದ ಒಂದು ತಂಡವನ್ನು ಕಟ್ಟಿಕೊಂಡು ಮೈಸೂರು ಮತ್ತು ಬೆಂಗಳೂರಿನಲ್ಲಿ ಸಾಕಷ್ಟು ಕಿರು ನಾಟಕಗಳನ್ನು ಪ್ರದರ್ಶಿಸಿದ್ದರು. ಲಾಕ್ಡೌನ್ನಿಂದ ಒದಗಿದ ಆರ್ಥಿಕ ಸಂಕಷ್ಟದಿಂದ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
37 ವರ್ಷಗಳ ನಂತರ ಆರೋಪಿ ಬಂಧನ
37 ವರ್ಷಗಳ ಹಿಂದೆ ಕಳ್ಳತನ ಪ್ರಕರಣವೊಂದರಲ್ಲಿ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕೆ.ಆರ್.ನಗರ ತಾಲ್ಲೂಕಿನ ಐಚನಹಳ್ಳಿ ಗ್ರಾಮದ ನಾಗರಾಜ ಎಂಬಾತನನ್ನು ಪಟ್ಟಣ ಪೊಲೀಸರು ಬಂಧಿಸಿದ್ದಾರೆ.
ನಾಗರಾಜ 1983ರಲ್ಲಿ ತಾಲ್ಲೂಕಿನ ಕಿರನಲ್ಲಿ ಗ್ರಾಮದ ಮನೆಯೊಂದರಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದ. ನಂತರ, ಜಾಮೀನು ಪಡೆದು ನ್ಯಾಯಾಲಯಕ್ಕೆ ಸತತ 37 ವರ್ಷಗಳಿಂದ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಪಿಎಸ್ಐ ಸದಾಶಿವ ತಿಪರೆಡ್ಡಿ, ಸಿಬ್ಬಂದಿ ಗವಿ ಗೌಡ, ನಂಜುಂಡಸ್ವಾಮಿ ಭಾಗವಹಿಸಿದ್ದರು.