ಮೈಸೂರು: ನಗರದ ಹೃದಯಭಾಗದಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಈ ಭಾಗದ ಸಂಪೂರ್ಣ ಪ್ರದೇಶವನ್ನು ಸ್ಯಾನಿಟೈಸ್ ಮಾಡಲು ಹಾಗೂ ಸ್ವಚ್ಛಗೊಳಿಸಲು ಮಹಾನಗರ ಪಾಲಿಕೆ ನಿರ್ಧರಿಸಿದೆ.
ಇದಕ್ಕಾಗಿ ಜೂನ್ 25 ರಿಂದ 28ರ ವರೆಗೆ ದೇವರಾಜ ಮಾರುಕಟ್ಟೆ, ಸಂತೆಪೇಟೆ, ಶಿವರಾಂ ಪೇಟೆ, ಮನ್ನಾರ್ಸ್ ಮಾರ್ಕೆಟ್ ಮತ್ತು ಬೋಟಿ ಬಜಾರ್ನಲ್ಲಿ ಎಲ್ಲ ರೀತಿಯ ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಲು ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ನಾಲ್ಕು ದಿನಗಳ ಬಳಿಕ ವಹಿವಾಟು ಆರಂಭಿಸುವಾಗ ಸರ್ಕಾರದ ಮಾರ್ಗಸೂಚಿಯಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ವ್ಯಾಪಾರಿಗಳಿಗೆ ಸೂಚಿಸಿದ್ದಾರೆ.
ವ್ಯಾಪಾರ ಸ್ಥಳದಲ್ಲಿ ಸೂಕ್ತ ಅಂತರ ಕಾಯ್ದುಕೊಳ್ಳಲು ಮಾರ್ಕಿಂಗ್ ಮಾಡಬೇಕು. ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಕಡ್ಡಾಯವಾಗಿ ಮಾಡಬೇಕು. ಸೋಂಕಿನ ಲಕ್ಷಣಗಳಾದ ಶೀತ, ಜ್ವರ ಕಂಡುಬಂದರೆ ಪಾಲಿಕೆ ಆರೋಗ್ಯಾಧಿಕಾರಿಗೆ ಮಾಹಿತಿ ನೀಡಬೇಕು. ಗ್ರಾಹಕರು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಬೇಕು. ಸುತ್ತಮುತ್ತಲಿನ ಸ್ಥಳಗಳನ್ನು ಕ್ರಿಮಿನಾಶಕ ಸಿಂಪಡಿಸಿ ಶುಚಿಯಾಗಿಟ್ಟುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.