ಮೈಸೂರು: ಮಹಾನಗರ ಪಾಲಿಕೆ, ಮುಡಾದಿಂದ ನಗರದ ವಿವಿಧೆಡೆ ನಿರಾಶ್ರಿತರಿಗಾಗಿ ನಿರ್ಮಿಸಿರುವ ಪುನರ್ವಸತಿ ಕೇಂದ್ರಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.
ನಗರದ ಸಿದ್ಧಾರ್ಥ ಲೇಔಟ್ನಲ್ಲಿರುವ ಸಿಐಟಿಬಿ ಛತ್ರ, ನಂಜರಾಜ ಬಹದ್ದೂರ್ ಛತ್ರ ಹಾಗೂ ಯೂತ್ ಹಾಸ್ಟೆಲ್ಗೆ ಭೇಟಿ ನೀಡಿ, ನಿರಾಶ್ರಿತರೊಂದಿಗೆ ಮಾತನಾಡಿದರು. ಸ್ಥಳೀಯ ಆಡಳಿತಗಳು ಒದಗಿಸಿರುವ ಮೂಲ ಸೌಲಭ್ಯಗಳನ್ನು ವೀಕ್ಷಿಸಿದರು.
‘ಕೆಲವು ದಿನಗಳ ಹಿಂದೆ ನಗರಕ್ಕೆ ಆಗಮಿಸಿದ್ದ 162 ಮಂದಿ ಕೂಲಿ ಕಾರ್ಮಿಕರು ರಾಜಸ್ಥಾನಕ್ಕೆ ತೆರಳುತ್ತಿದ್ದು, ಮಹಾರಾಷ್ಟ್ರದ ಗಡಿ ಬಂದ್ ಮಾಡಲಾದ ಕಾರಣ ಸಂಕಷ್ಟಕ್ಕೆ ಸಿಲುಕ್ಕಿದ್ದರು. ಅವರನ್ನು ಮಾನವೀಯತೆ ದೃಷ್ಟಿಯಿಂದ ಮೈಸೂರಿಗೆ ಕರೆ ತಂದು ಸಿಐಟಿಬಿ ಛತ್ರದಲ್ಲಿರಿಸಿ, ಊಟೋಪಚಾರದೊಂದಿಗೆ ಆಶ್ರಯ ನೀಡಲಾಗಿದೆ’ ಎಂದು ಸಚಿವ ಸೋಮಣ್ಣ ಈ ಸಂದರ್ಭ ತಿಳಿಸಿದರು.
‘ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿಯೂ 217 ನಿರ್ಗತಿಕರಿಗೆ ಆಶ್ರಯ ನೀಡಲಾಗಿದೆ. ಇವರಿಗೆ ವಿವಿಧ ಸಂಘ–ಸಂಸ್ಥೆಗಳು ನಗರ ಪಾಲಿಕೆಯೊಂದಿಗೆ ಕೈ ಜೋಡಿಸಿ, ಅಗತ್ಯ ಸೌಲಭ್ಯ ಒದಗಿಸುತ್ತಿವೆ. ಇಂತಹ ಕ್ಲಿಷ್ಟ ಪರಿಸ್ಥಿತಿಯಲ್ಲಿ ಯಾರೊಬ್ಬರು ಹಸಿವಿನಿಂದ ಇರಬಾರದು ಎಂಬುದೇ ನಮ್ಮ ಉದ್ದೇಶವಾಗಿದೆ’ ಎಂದರು.
ಸಂಸದ ಪ್ರತಾಪಸಿಂಹ, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಮುಡಾ ಆಯುಕ್ತ ಪಿ.ಎಸ್.ಕಾಂತರಾಜು ಸಚಿವರ ಜತೆಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.