ಮೈಸೂರು: ‘ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿ ರಾಜ್ಯ ಸುತ್ತುವುದನ್ನು ಬಿಟ್ಟು ಜ್ಯೋತಿಷ ಕಲಿಯುತ್ತಿರಬೇಕು.ಹೀಗಾಗಿ,ಪದೇಪದೇ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ’ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮಂಗಳವಾರ ಇಲ್ಲಿ ತಿರುಗೇಟು ನೀಡಿದರು.
‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ತಮ್ಮ ನಡುವಿನ ಜಟಾಪಟಿ ಮುಚ್ಚಿಕೊಳ್ಳಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಮೊದಲು ಕಾಂಗ್ರೆಸ್ ಪಕ್ಷದಲ್ಲಿನ ಗೊಂದಲಗಳತ್ತ ಗಮನ ಹರಿಸಲಿ. ನಮ್ಮ ಪಕ್ಷದ ಉಸಾಬರಿ ಏಕೆ? ಸಿದ್ದರಾಮಯ್ಯ ಅವರ ಸರ್ಟಿಫಿಕೇಟ್ ಅಗತ್ಯವಿಲ್ಲ. ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ’ ಎಂದುಹೇಳಿದರು.
ಶಾಸಕ ಮುನಿರತ್ನ ಅವರಿಗೆ ಸಚಿವ ಸ್ಥಾನ ಸಿಗಲಿದೆಯೇ ಎಂಬಪ್ರಶ್ನೆಗೆ, ‘ನಾಗೇಶ್ಅವರ ರಾಜೀನಾಮೆಯಿಂದ ತೆರವಾದ ಒಂದು ಸ್ಥಾನಬಾಕಿ ಇದೆ. ಅದನ್ನು ಮುನಿರತ್ನ ಅವರಿಗೆ ಕೊಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. 10 ಸಚಿವರು ಭೇಟಿಯಾಗಿ ಈಗಾಗಲೇ ಮನವಿ ಮಾಡಿದ್ದೇವೆ. ಎರಡು ತಿಂಗಳಲ್ಲಿ ಸಚಿವ ಸ್ಥಾನ ಸಿಗಬಹುದು’ ಎಂದರು.
ಸಿ.ಡಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ‘ಬೆಂಗಳೂರು ಅಭಿವೃದ್ಧಿಗೆ ರೂಪುರೇಷೆ ನೀಡಿ ಅದಕ್ಕೆ ಸಂಬಂಧಿಸಿದ ಸಿ.ಡಿಯನ್ನು ನಮಗೆ ಕಳುಹಿಸುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಬೇರೆ ಯಾವುದೇ ಸಿ.ಡಿಯನ್ನು ನಾನು ನೋಡಿಲ್ಲ. ಹೀಗಾಗಿ, ಅದರ ಬಗ್ಗೆ ಮಾಹಿತಿ ಇಲ್ಲ’ ಎಂದು ನುಡಿದರು.
‘ಲೋಕೋಪಯೋಗಿ ಇಲಾಖೆಯಿಂದ ಪ್ರತಿ ಕ್ಷೇತ್ರಕ್ಕೆ ₹ 25 ಕೋಟಿ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಕೋವಿಡ್ ಸಂಕಟದಿಂದ ಹೊರಬರುತ್ತಿರುವಂತೆ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ವೇಗ ಪಡೆದುಕೊಂಡಿವೆ’ ಎಂದುತಿಳಿಸಿದರು.