ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಭಾನುವಾರ ದಸರೆಯ ಸಂಭ್ರಮಕ್ಕೆ 'ಗಜಪಯಣ'ವು ಮುನ್ನುಡಿ ಬರೆಯಿತು.
ತುಂತುರು ಮಳೆಯಲ್ಲೇ ಜಂಬೂಸವಾರಿಯ ಆಕರ್ಷಣೆಯಾದ ಚಿನ್ನದ ಅಂಬಾರಿ ಹೊರುತ್ತಿರುವ ಆನೆ ಅಭಿಮನ್ಯು ಸೇರಿದಂತೆ 9 ಆನೆಗಳಿಗೆ ಸಚಿವರಾದ ಎಸ್.ಟಿ.ಸೋಮಶೇಖರ್, ಉಮೇಶ್ ಕತ್ತಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗಜಪಯಣಕ್ಕೆ ಚಾಲನೆ ನೀಡಿದರು.
ಪುರೋಹಿತರು ಶ್ಲೋಕಗಳನ್ನು ಹೇಳಿದರೆ, ಡೊಳ್ಳು ಕುಣಿತ, ಸೋಮನ ಕುಣಿತ, ವೀರಗಾಸೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳ ಪ್ರದರ್ಶನ ಮೆರುಗು ಹೆಚ್ಚಿಸಿತು.
ಆನೆಗಳಿಗೆ ಪಂಚಫಲ, ಕಡುಬು, ಚಕ್ಕುಲಿ, ನಿಪ್ಪಟ್ಟು, ಹೋಳಿಗೆ, ಬೆಲ್ಲ, ಕಬ್ಬು, ದ್ರಾಕ್ಷಿ, ಗೋಡಂಬಿ, ಕಲ್ಲು ಸಕ್ಕರೆ, ಮೋದಕ ನೈವೇದ್ಯ ನೀಡಿ, ಶೋಡಷೋಪಚಾರ ಪೂಜೆ ಸಲ್ಲಿಸಲಾಯಿತು. ಗಣಪತಿ ಅರ್ಚನೆಯ ಜೊತೆ ವನದೇವತೆ ಹಾಗೂ ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಲಾಯಿತು.
ಪೂಜೆ ನಂತರ ಕೆಲವು ದೂರ ನಡೆದ ಆನೆಗಳನ್ನು ಮೈಸೂರಿಗೆ ಕರೆತರಲು ಲಾರಿಗಳನ್ನು ಸಿದ್ಧಮಾಡಲಾಗಿತ್ತು.
ವೀರನಹೊಸಹಳ್ಳಿ ಬಳಿ ಸಜ್ಜುಗೊಳಿಸಿದ್ದ ವೇದಿಕೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಾಡಿ ಜನರು, ಜಿಲ್ಲೆಯ ವಿವಿಧೆಡೆಯಿಂದ ಬಂದಿದ್ದ. ನಾಗರಿಕರು ಗಜಪಯಣವನ್ನು ವೀಕ್ಷಿಸಿದರು.
ಶಾಸಕ ಎಚ್.ಪಿ.ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಮೇಯರ್ ಸುನಂದಾ ಫಾಲನೇತ್ರ, ನಿಗಮ ಮಂಡಳಿ ಅಧ್ಯಕ್ಷರಾದ ಶಿವಕುಮಾರ್, ಎಂ.ಶಿವಣ್ಣ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಡಿಸಿಎಫ್ ಗಳಾದ ಕರಿಕಾಳನ್, ಕಮಲಾ ಕರಿಕಾಳನ್, ಮಾಲತಿ ಪ್ರಿಯಾ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್.ಪೂರ್ಣಿಮಾ, ಮುಡಾ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.