ಮೈಸೂರು: ‘ಉತ್ತಮ ಆರೋಗ್ಯ, ಯೋಗಕ್ಷೇಮ, ಲಿಂಗ ಸಮಾನತೆಯ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು’ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ಎಂ.ಬಿ.ಪದ್ಮಶೇಖರ ಪಾಂಡೆ ಸಲಹೆ ನೀಡಿದರು.
ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ, ಮೈಸೂರು ಜಿಲ್ಲಾಡಳಿತದ ವತಿಯಿಂದ ಸಂಖ್ಯಾಶಾಸ್ತ್ರಜ್ಞರಾದ ಪ್ರೊ.ಪ್ರಶಾಂತ್ಚಂದ್ರ ಮಹಾಲನೋಬಿಸ್ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಕಚೇರಿ ಸಂಕೀರ್ಣದಲ್ಲಿ ಸೋಮವಾರ ಆಯೋಜಿಸಿದ್ದ 14ನೇ ಸಾಂಖ್ಯಿಕ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯ ವಿವಿಧ ಇಲಾಖಾ ವತಿಯಿಂದ ನೀಡುವ ಅಂಕಿ–ಅಂಶಗಳು ದೇಶದ ನೀತಿ–ನಿರೂಪಣೆಯಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸುವುದರಿಂದ ಸಾಂಖ್ಯಿಕ ಇಲಾಖೆ ನಿಖರತೆಯಿಂದ ಕೂಡಿರುವ ಅಂಕಿ ಅಂಶಗಳನ್ನು ಸಂಗ್ರಹಿಸುವಂತೆ’ ಹಾಜರಿದ್ದ ಅಧಿಕಾರಿ/ಸಿಬ್ಬಂದಿಗಳಿಗೆ ತಿಳಿಸಿದರು.
ಪ್ರಭಾರ ಜಿಲ್ಲಾ ಸಂಖ್ಯಾಸಂಗ್ರಹಣಾಧಿಕಾರಿ ಎಂ.ಪ್ರಕಾಶ್ ಮಾತನಾಡಿ ‘ಸುಸ್ಥಿರ ಅಭಿವೃದ್ಧಿ ಗುರಿ ಯೋಜನೆಯಡಿ ಗುರುತಿಸಲಾಗಿರುವ 17 ಮುಖ್ಯ ಗುರಿಗಳಲ್ಲಿ ಎಲ್ಲರಿಗೂ ಆರೋಗ್ಯ ಮತ್ತು ಲಿಂಗ ಸಮಾನತೆ ಎಂಬ ಅಂಶಗಳು ಪ್ರಸ್ತುತವಾಗಿ ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ’ ಸಲಹೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರೂಪಣಾಧಿಕಾರಿ ಗೀತಾಲಕ್ಷ್ಮೀ, ಅಂಗವಿಕಲ ಕಲ್ಯಾಣಾಧಿಕಾರಿ ಮಮತಾ ಮಾತನಾಡಿದರು. ಸಹಾಯಕ ಸಾಂಖ್ಯಿಕ ಅಧಿಕಾರಿ ಡಾ.ಎಚ್.ಜೆ.ರೂಪಾ ಸುಸ್ಥಿರ ಅಭಿವೃದ್ಧಿಯ ಬಗ್ಗೆ ವಿಷಯ ಮಂಡಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕ ಮಹದೇವಪ್ಪ, ಮೈಸೂರು ಜಿಲ್ಲಾ ಪಂಚಾಯಿತಿಯ ಉಪ ನಿರ್ದೇಶಕರು (ಸಾಂಖ್ಯಿಕ) ಹಾಗೂ ಜಿಲ್ಲೆಯ ವಿವಿಧ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಹಾಯಕ ನಿರ್ದೇಶಕರು, ಸಹಾಯಕ ಸಾಂಖ್ಯಿಕ ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.