ಮೈಸೂರು: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಮೈಸೂರಿನಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು.
ಅರಮನೆ ಆವರಣದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಕಾರ್ಯಕ್ರಮ ನಡೆಯಿತು. ಸಚಿವರು ಬೆಳಿಗ್ಗೆ 8.30 ಕ್ಕೆ ಅರಮನೆ ಆವರಣದಲ್ಲಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.
ಧ್ವಜಾರೋಹಣದ ಬಳಿಕ ರಾಜ್ಯೋತ್ಸವ ಸಂದೇಶ ನೀಡಿದ ಸಚಿವರು, ಅಖಂಡ ಕರ್ನಾಟಕದ ಸರ್ವಾಂಗೀಣ ಅಭಿವೃದ್ದಿಯಲ್ಲಿ ಯುವ ಪೀಳಿಗೆ ಪಾಲುದಾರರಾಗಬೇಕು. ಕನ್ನಡ ಸಾಹಿತ್ಯ, ಸಂಸ್ಕೃತಿ, ಕಲೆಯ ಬಗ್ಗೆ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಕರೆಕೊಟ್ಟರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 11 ಮಂದಿಯನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಶಾಸಕರಾದ ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ತನ್ವೀರ್ ಸೇಠ್, ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಎಸ್.ಪಿ.ರಿಷ್ಯಂತ್, ಪೊಲೀಸ್ ಆಯುಕ್ತ ಚಂದ್ರಗುಪ್ತ ಮತ್ತಿತರರು ಪಾಲ್ಗೊಂಡರು.