ಮೈಸೂರು: ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಗುಡ್ಡದಲ್ಲಿ ಮಂಗಳವಾರ ರಾತ್ರಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಡಿಸಿಪಿ ಪ್ರದೀಪ್ಗುಂಟಿ ನೇತೃತ್ವದಲ್ಲಿ 6 ತಂಡಗಳನ್ನು ರಚಿಸಲಾಗಿದೆ. ತನಿಖೆಯ ಮೇಲುಸ್ತುವಾರಿಗಾಗಿ ಎಡಿಜಿಪಿ ಪ್ರತಾಪರೆಡ್ಡಿ ನಗರದಲ್ಲಿ ಮೊಕ್ಕಾಂ ಹೂಡಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಗುರುವಾರ ಪರಿಶೀಲನೆ ನಡೆಸಿ, ಸಂತ್ರಸ್ತ ಯುವತಿ ಹಾಗೂ ಆಕೆಯ ಸ್ನೇಹಿತನಿಂದ ಹೇಳಿಕೆ ಪಡೆದಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಡಿಎನ್ಎ ಮಾದರಿಗಳನ್ನು ಸಂಗ್ರಹಿಸುವ ಪ್ರಯತ್ನವೂ ನಡೆದಿದೆ.
ಘಟನೆ ನಡೆದ ಸ್ಥಳದ ಟವರ್ ಸಂಪರ್ಕಕ್ಕೆ ಬಂದಿದ್ದ ಮೊಬೈಲ್ ಫೋನ್ ಸಂಖ್ಯೆಗಳನ್ನು ಪೊಲೀಸರು ಜಾಲಾಡುತ್ತಿದ್ದು, ಸ್ಥಳದ ಸಮೀಪದ 4 ರಸ್ತೆಗಳಲ್ಲಿರುವ ಸಿಸಿಟಿವಿ ಕ್ಯಾಮರಾಗಳ ದೃಶ್ಯಾವಳಿಗಳನ್ನೂ ಪರಿಶೀಲಿಸುತ್ತಿದ್ದಾರೆ. ಅವುಗಳನ್ನು ಆಧರಿಸಿಯೇ 5ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಿದ್ದಾರೆ. ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತ ಖಾಸಗಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಸ್ಥಳದಲ್ಲಿ ಹಾಗೂ ಹತ್ತಿರದ ಖಾಲಿ ನಿವೇಶನಗಳಲ್ಲಿ ಮದ್ಯ ಹಾಗೂ ನೀರಿನ ಬಾಟಲಿಗಳು ಪತ್ತೆಯಾಗಿವೆ. ‘ಇಡೀ ಪ್ರದೇಶದಲ್ಲಿ ಸಂಜೆಯ ನಂತರ ಅನೈತಿಕ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿವೆ’ ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದರು.
ಗೃಹ ಸಚಿವರು ಪರಿಶೀಲಿಸಿ, ಪೊಲೀಸ್ ಇಲಾಖೆಗೆ ಸರ್ಜರಿ ಮಾಡಲಿದ್ದಾರೆ. ಮೈಸೂರಿನಲ್ಲಿ ಮತ್ತೆ ಇಂಥ ಘಟನೆ ನಡೆದರೆ ಸಹಿಸುವುದಿಲ್ಲ’ ಎಂದು ಹೇಳಿದರು.
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಅವರು ಸಂತ್ರಸ್ತೆಯ ಯೋಗಕ್ಷೇಮ ವಿಚಾರಿಸಿದರು. ಆ. 27ರಂದು ಬೆಳಿಗ್ಗೆ 11ಕ್ಕೆ ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದಾರೆ.
ವಿಡಿಯೊ ಮಾಡಿಕೊಂಡ ಆರೋಪಿಗಳು?
ಅತ್ಯಾಚಾರದ ದೃಶ್ಯವನ್ನು ವಿಡಿಯೊ ಮಾಡಿಕೊಂಡಆರೋಪಿಗಳು ಹಣಕ್ಕಾಗಿ ಪೀಡಿಸಿದ್ದರು. ಹಣ ನೀಡದೇ ಇದ್ದಾಗ ಸಂತ್ರಸ್ತೆಯ ಸ್ನೇಹಿತನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಆದರೆ ‘ಆ ಕುರಿತು ಯಾವುದೇ ವಿವರ ನೀಡಲು ಸಾಧ್ಯವಿಲ್ಲ’ ಎಂದು ಎಡಿಜಿಪಿ ಪ್ರತಿಕ್ರಿಯಿಸಿದರು.
ತೀವ್ರಗೊಂಡ ಆಕ್ರೋಶ
ಅತ್ಯಾಚಾರ ಘಟನೆಯನ್ನು ಖಂಡಿಸಿ ನಗರದಲ್ಲಿ ಗುರುವಾರ ವಿವಿಧ ಸಂಘಟನೆಗಳ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಖಿಲ ಭಾರತ ಸಾಂಸ್ಕೃತಿಕ ಮಹಿಳಾ ಸಂಘಟನೆ, ಆಲ್ ಇಂಡಿಯಾ ಡೆಮಾಕ್ರೆಟಿಕ್ಸ್ ಸ್ಟೂಡೆಂಟ್ಸ್ ಆರ್ಗನೈಜೇಶನ್, ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಜೇಷನ್, ಮಹಿಳಾ ರಕ್ಷಣಾಪಡೆ, ಮಹಿಳಾ ಕಾಂಗ್ರೆಸ್, ಗಂಧದಗುಡಿ ಫೌಂಡೇಷನ್, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.