ಮೈಸೂರು: ‘ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದಂತೆ ನಡೆದುಕೊಳ್ಳದೆ ಪದವೀಧರರನ್ನು ನಿರುದ್ಯೋಗಿಗಳನ್ನಾಗಿ ಮಾಡಿ ಬೀದಿ ಪಾಲಾಗಿಸಿದ್ದಾರೆ’ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಆರೋಪಿಸಿದರು.
‘ಎಂಟು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಮೋದಿ ನಿರುದ್ಯೋಗ ಸಮಸ್ಯೆ ನಿವಾರಿಸಲು ಪ್ರಯತ್ನಿಸಲಿಲ್ಲ. ಪದವಿ, ಸ್ನಾತಕೋತ್ತರ ಪದವಿ ಪಡೆದಿದ್ದರೂ ಉದ್ಯೋಗ ಸಿಗದಿದ್ದವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳು ಸಾಕಷ್ಟು ನಡೆದಿವೆ’ ಎಂದು ಸುದ್ದಿಗೋಷ್ಠಿಯಲ್ಲಿ ಶನಿವಾರ ದೂರಿದರು.
‘ಪದವೀಧರರು ಈ ಬಾರಿಯ ವಿಧಾನಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಚ್ಚೆತ್ತುಕೊಳ್ಳಬೇಕು. ನಿರುದ್ಯೋಗ ಸಮಸ್ಯೆ ಹೋಗಲಾಡಿಸಲು ವಿಫಲವಾಗಿರುವ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸುವುದಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಅವರನ್ನು ಬೆಂಬಲಿಸಬೇಕು’ ಎಂದು ಕೋರಿದರು.
‘ಮೀಸಲಾತಿ ತೆಗೆಯುವ ಹುನ್ನಾರದಿಂದಾಗಿ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗೀಕರಣ ಮಾಡುತ್ತಿದೆ. ಬಂಡವಾಳ ಹಿಂತೆಗೆಯುವ ಮೂಲಕ ನೌಕರರ ಕೆಲಸಕ್ಕೆ ಕುತ್ತು ತರುತ್ತಿದೆ’ ಎಂದು ಆರೋಪಿಸಿದರು.
ನಗರ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಲತಾ ಚಿಕ್ಕಣ್ಣ, ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷೆ ಲತಾ ಸಿದ್ದಶೆಟ್ಟಿ, ನಾಯಕಿಯರಾದ ಪುಷ್ಪವಲ್ಲಿ, ಲತಾ ಮೋಹನ್, ರಾಧಾಮಣಿ, ವೀಣಾ, ಸುಜಾತಾ ರಾವ್, ಮಮತಾ ಇದ್ದರು.