ಮೈಸೂರು: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ವಿಚಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಒಳಗೊಳ್ಳದೇ ಏಕಪಕ್ಷೀಯವಾಗಿ ಉನ್ನತ ಶಿಕ್ಷಣ ಸಚಿವರು ನಿರ್ಧಾರ ಕೈಗೊಳ್ಳುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್ ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾಡಳಿತದ ವತಿಯಿಂದ ಇಲ್ಲಿನ ಸೆಂಟ್ ಮಥಾಯಿಸ್ ಶಾಲೆಯ ಸಭಾಂಗಣದಲ್ಲಿ ಭಾನುವಾರ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಬೇರು ಅತ್ಯಂತ ಮುಖ್ಯ. ಬೇರುಗಳನ್ನೆ ಕಡೆಗಣಿಸಿ ಕೊಂಬೆಗಳನ್ನು ಸುಧಾರಿಸಲು ಹೊರಟರೆ ಪ್ರಯೋಜನ ಇಲ್ಲ. ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ವಿಸ್ತೃತ ಚರ್ಚೆ ರಾಜ್ಯದೆಲ್ಲೆಡೆ ನಡೆಯಬೇಕಿತ್ತು ಎಂದು ಅಭಿಪ್ರಾಯಪಟ್ಟರು.
ಶಾಸಕ ತನ್ವೀರ್ ಸೇಠ್ ಮಾತನಾಡಿ, ಉನ್ನತ ಶಿಕ್ಷಣ ಸಚಿವರು ತರಾತುರಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲು ಹೊರಟಿರುವುದು ಸರಿಯಲ್ಲ. ಅವಸರವೆ ಅಪಘಾತಕ್ಕೆ ಕಾರಣ ಎಂಬ ಮಾತನ್ನು ಮರೆಯಬಾರದು ಎಂದು ಹೇಳಿದರು.