ಮೈಸೂರು: 'ದೇವರ ಆಟ ಏನೋ ಗೊತ್ತಿಲ್ಲ. ಆದರೆ, ದೆವ್ವ ಭೂತಗಳಂತೂ ಇಂದು ಭಾರತವನ್ನು ಆಳ್ವಿಕೆ ಮಾಡುತ್ತಿವೆ' ಎಂದು ಸಾಹಿತಿ ದೇವನೂರ ಮಹಾದೇವ ಶನಿವಾರ ಇಲ್ಲಿ ಹೇಳಿದರು.
ಭೂಸುಧಾರಣಾ ಕಾಯ್ದೆ ತಿದ್ದುಪಡಿ- ಖಾಸಗೀಕರಣ ನೀತಿಗಳು ಪರಿಣಾಮ ಮತ್ತು ಸವಾಲುಗಳು ಕುರಿತ ವಿಚಾರಗೋಷ್ಠಿ ಮತ್ತು ಸಂವಾದ ಕಾರ್ಯಕ್ರಮವನ್ನು ರೈತರಿಗೆ ಮಣ್ಣು ನೀಡುವ ಮೂಲಕ ಅವರು ಉದ್ಘಾಟಿಸಿದರು.
'ಕೊರೊನಾ ಎಂಬ ದೇವರ ಆಟದಿಂದ ರಾಜ್ಯಗಳ ಬಾಬ್ತು ನೀಡಲು ಆಗುತ್ತಿಲ್ಲ ಎನ್ನುವ ಅರ್ಥ ಸಚಿವರನ್ನು ಭಾರತ ಪಡೆದಿದೆ. ದೇಶದ ಒಕ್ಕೂಟ ವ್ಯವಸ್ಥೆಯ ಬುಡವನ್ನೇ ಕಡಿದು ಹಾಕಿ, ರಾಜ್ಯಗಳ ಸ್ಥಾನವನ್ನು ದೈನೇಸಿ ಸ್ಥಾನಕ್ಕೆ ತಳ್ಳುವ ಜಿಎಸ್ಟಿ ತಂದು ದೆವ್ವದ ಆಟ ಆಡಿದವರು ಯಾರು' ಎಂದು ಪ್ರಶ್ನಿಸಿದರು.
ಜನರಿಗೆ ಕನಸು ಕಾಣಿಸಿ ನೋಟ್ ಬ್ಯಾನ್ ತಂದು ಭಾರತದ ಬದುಕನ್ನು ದುಃಸ್ವಪ್ನ ಮಾಡಿದ ಭೂತದ ಆಟ ಆಡಿದವರು ಯಾರು. ಕೊರೊನಾ ಭೀಕರ ವಾತಾವರಣದಲ್ಲಿ ಜನ ಸಮುದಾಯ ಧ್ವನಿ ತೆಗೆಯಲು ಕಷ್ಟಕರವಾದ ಸನ್ನಿವೇಶವನ್ನೇ ದುರ್ಬಳಕೆ ಮಾಡಿಕೊಂಡು, ಖಾಸಗಿ ಮತ್ತು ಕಾರ್ಪೊರೇಟ್ ಕಂಪನಿಗಳಿಗೆ ಸರ್ವಸ್ವವನ್ನೂ ಧಾರೆ ಎರೆಯುವ ಕಾಯ್ದೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಹರಿಹಾಯ್ದರು.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಹಾಗೂ ಸ್ವರಾಜ್ ಇಂಡಿಯಾ, ಜನಾಂದೋಲನ ಮಹಾಮೈತ್ರಿ, ಜನಚೇತನ ಟ್ರಸ್ಟ್ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳ ಐದುನೂರಕ್ಕೂ ಹೆಚ್ಚು ರೈತ ಸಂಘ ಮತ್ತು ದಸಂಸ ದ ಪ್ರಮುಖ ಕಾರ್ಯಕರ್ತರು ಭಾಗವಹಿಸಿದ್ದಾರೆ.
ಕಾರ್ಯಕ್ರಮದಲ್ಲಿ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ಚಾಮರಸ ಮಾಲೀ ಪಾಟೀಲ್, ಆಲಗೂಡು ಶಿವಕುಮಾರ್, ಎನ್.ಮುನಿಸ್ವಾಮಿ, ಎನ್.ವೆಂಕಟೇಶ್, ಬೆಟ್ಟಯ್ಯಕೋಟೆ, ಸೇರಿದಂತೆ ಅನೇಕರು ಭಾಗವಹಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.