ರೋಹಿಣಿ ಸಿಂಧೂರಿ ಅಮಾನತಿಗೆ ಎಂ.ಎನ್.ಪಿಳ್ಳಪ್ಪ ಆಗ್ರಹ

ಮೈಸೂರು: ‘ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರು ನಿಯಮ ಉಲ್ಲಂಘಿಸಿ ಜಿಲ್ಲಾಧಿಕಾರಿ ನಿವಾಸದ ಆವರಣದಲ್ಲಿ ₹50 ಲಕ್ಷ ವೆಚ್ಚದಲ್ಲಿ ಈಜುಕೊಳ ನಿರ್ಮಿಸಿಕೊಂಡಿದ್ದಾರೆ. ಅವರನ್ನು ಕೂಡಲೇ ಅಮಾನತುಗೊಳಿಸಬೇಕು’ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಅಧಿಕಾರಿಗಳು ಮತ್ತು ನೌಕರರ ಸಂಘದ ಮಾಜಿ ಅಧ್ಯಕ್ಷ ಎಂ.ಎನ್.ಪಿಳ್ಳಪ್ಪ ಆಗ್ರಹಿಸಿದರು.
‘ಶಾಸಕರೊಬ್ಬರು ಸರ್ಕಾರಿ ಜಾಗದಲ್ಲಿ ಕಲ್ಯಾಣ ಮಂಟಪ ನಿರ್ಮಿಸಿದ್ದಾರೆ ಎಂದು ರೋಹಿಣಿ ಸಿಂಧೂರಿ ಆರೋಪಿಸಿದ್ದರು. ಆದರೆ, ಅದು ಆಧಾರರಹಿತ ಎಂಬುದು ಸಾಬೀತಾಗಿದೆ. ಈ ಹಿಂದೆ ರೋಹಿಣಿ ಅವರು ಮುಜರಾಯಿ ಇಲಾಖೆ ಆಯುಕ್ತರಾಗಿದ್ದ ಸಂದರ್ಭದಲ್ಲಿ, ತಿರುಪತಿಯಲ್ಲಿ ಮೈಸೂರು ಮಹಾರಾಜರ ಕಾಲದ ಜಾಗವನ್ನು ಆಂಧ್ರ ಸರ್ಕಾರಕ್ಕೆ ಹಾಗೂ ಗುತ್ತಿಗೆದಾರರಿಗೆ ಹಸ್ತಾಂತರ ಮಾಡಿದ್ದಾರೆ ಎಂಬ ಆರೋಪವಿದೆ. ಈ ಬಗ್ಗೆಯೂ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು’ ಎಂದು ಸುದ್ದಿಗೋಷ್ಠಿಯಲ್ಲಿ ಶನಿವಾರ ಒತ್ತಾಯಿಸಿದರು.
‘ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಮೃತಪಟ್ಟಿದ್ದು, ಈ ಪ್ರಕರಣದಲ್ಲಿ ರೋಹಿಣಿ ಅವರ ಪಾತ್ರ ಎಷ್ಟಿದೆ ಎಂಬುದನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಬೇಕು. ಮಂಡ್ಯ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದಾಗ, ಶೌಚಾಲಯ ನಿರ್ಮಾಣ ಸಂಬಂಧ ಸುಳ್ಳು ಲೆಕ್ಕ ತೋರಿಸಿ ಕೇಂದ್ರ ಸರ್ಕಾರದಿಂದ ಪ್ರಶಸ್ತಿ ಪಡೆದಿದ್ದಾರೆ ಎಂಬ ಆಪಾದನೆ ಇದೆ. ಇದರ ಬಗ್ಗೆಯೂ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.