ಮೈಸೂರು: ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರು ಯುವ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಭಾನುವಾರ ಚಾಮುಂಡಿ ಬೆಟ್ಟಕ್ಕೆ ಚಾರಣ ಹಾಗೂ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಚಾಮುಂಡಿ ಬೆಟ್ಟದ ಪಾದದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥಸ್ವಾಮಿ, ‘ಜನರಿಗೆ ಸ್ವಚ್ಛತೆ ಬಗ್ಗೆ ಅರಿವಿಲ್ಲ. ಕಸವನ್ನು ಎಲ್ಲೆಂದರಲ್ಲಿ ಹಾಕುತ್ತಾರೆ. ಇತ್ತೀಚೆಗೆ ಪುರಭವನದ ಆವರಣವನ್ನು ಸ್ವಚ್ಛಗೊಳಿಸಲಾಗಿತ್ತು. ಮರುದಿನವೇ ಕಸದ ರಾಶಿ ಬಿದ್ದಿತ್ತು. ಎಲ್ಲಿ ಕಸ ಹಾಕಬೇಕು ಎಂಬುದರ ಬಗ್ಗೆ ಜನರಿಗೆ ಅರಿವು ಮೂಡಿಸುವ ಅಗತ್ಯವಿದೆ’ ಎಂದರು.
ಚಾರಣದಲ್ಲಿ ಸಾರ್ವಜನಿಕರು, ಎನ್ಎಸ್ಎಸ್ ವಿದ್ಯಾರ್ಥಿಗಳು ಸೇರಿದಂತೆ 100ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಬೆಟ್ಟದಿಂದ ಇಳಿದು ಬರುವಾಗ ಸುತ್ತಮುತ್ತ ಇದ್ದ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಿದರು. 123 ಕೆ.ಜಿ. ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿದ್ದು, ಅದನ್ನು ಪಾಲಿಕೆಗೆ ನೀಡಲಾಗಿದೆ.
ಕಾರ್ಯಕ್ರಮದಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಸುರೇಶ್, ನೆಹರು ಯುವ ಕೇಂದ್ರದ ಉಪನಿರ್ದೇಶಕ ಸಿದ್ದರಾಮಪ್ಪ, ಮೈಸೂರು ವಿಶ್ವವಿದ್ಯಾಲಯದ ಎನ್ಎಸ್ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಎಂ.ಬಿ.ಸುರೇಶ್ ಇದ್ದರು.