ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂನ್ 21ರಂದು ಪ್ರಧಾನಿ ಮೋದಿ ಮೈಸೂರಿಗೆ: ಸಚಿವ ಎಸ್.ಟಿ.ಸೋಮಶೇಖರ್

ರಸ್ತೆಗುಂಡಿಗಳ ವಿಚಾರ ಮುಖ್ಯಮಂತ್ರಿ ಗಮನಕ್ಕೆ ತರಲಾಗಿದೆ ಎಂದ ಸಚಿವ
Last Updated 24 ಮೇ 2022, 6:52 IST
ಅಕ್ಷರ ಗಾತ್ರ

ಮೈಸೂರು: ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜೂನ್ 21ರಂದು ನಗರಕ್ಕೆ ಆಗಮಿಸುವುದು ಬಹುತೇಕ ಖಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಯೋಗ ದಿನಾಚರಣೆಗಾಗಿ ಸ್ಥಳ ನಿರ್ಧಾರ ಇನ್ನೂ ಆಗಿಲ್ಲ. ರೇಸ್‌ಕೋರ್ಸ್‌, ಅರಮನೆ ಆವರಣ ಸೇರಿದಂತೆ ನಗರದಲ್ಲಿರುವ ಹಲವು ಸ್ಥಳಗಳನ್ನು ಪರಿಶೀಲಿಸಲಾಗುತ್ತಿದೆ. ಕೇಂದ್ರ ತಂಡವು ಸದ್ಯದಲ್ಲೇ ಅಂತಿಮಗೊಳಿಸಲಿದೆ ಎಂದು ಅವರು ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಎಲ್ಲ ಪಕ್ಷದವರನ್ನೂ ಒಳಗೊಂಡ ಸಮಿತಿಯೊಂದನ್ನು ರಚಿಸಲಾಗುವುದು. ಶಾಸಕರು, ವಿಧಾನಪರಿಷತ್ ಸದಸ್ಯರನ್ನು ಒಳಗೊಂಡ ಈ ಸಮಿತಿಯಲ್ಲಿ ವಿವಿಧ ಯೋಗತರಬೇತಿ ಕೇಂದ್ರಗಳ ಮುಖ್ಯಸ್ಥರೂ ಸದಸ್ಯರಾಗಿರುತ್ತಾರೆ. ಒಟ್ಟಾರೆ, ಕಾರ್ಯಕ್ರಮದ ಕುರಿತು ಇಲ್ಲಿ ನಿರ್ಧರಿಸಲಾಗುವುದು ಎಂದರು.

ಇದಕ್ಕಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರು ಮೇ 30ರಂದು ನಗರಕ್ಕೆ ಬರಲಿದ್ದಾರೆ. ಇದಕ್ಕೂ ಮುನ್ನ ಮೇ 28 ಇಲ್ಲವೇ 29ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೈಸೂರಿಗೆ ಬಂದು ಈ ಸಂಬಂಧ ಸಭೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಯೋಗ ದಿನಾಚರಣೆಯಲ್ಲಿ ಕೇವಲ ಮೈಸೂರಿಗರಿಗಷ್ಟೇ ಅವಕಾಶ ನೀಡದೇ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಯೋಗಪಟುಗಳು ಭಾಗವಹಿಸಲೂ ಅವಕಾಶ ಕಲ್ಪಿಸುವ ಚಿಂತನೆ ನಡೆದಿದೆ ಎಂದು ಹೇಳಿದರು.

ಪ್ರಧಾನಮಂತ್ರಿ ಮೈಸೂರಿಗೆ ಭೇಟಿ ನೀಡುವ ವಿಚಾರವನ್ನು ಕೇವಲ ಮುಂಬರುವ ವಿಧಾನಸಭಾ ಚುನಾವಣಾ ದೃಷ್ಟಿಯಿಂದ ಮಾತ್ರ ನೋಡಬಾರದು. ಮೈಸೂರಿನ ಪ್ರವಾಸೋದ್ಯಮದ ಅಭಿವೃದ್ಧಿಯನ್ನೂ ಗಮನಿಸಬೇಕು. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಹೆಚ್ಚಿನ ಪ್ರಚಾರ ನಡೆಸಲಾಗುವುದು ಎಂದು ಹೇಳಿದರು.

ಮುಖ್ಯಮಂತ್ರಿ ಗಮನಕ್ಕೆ ರಸ್ತೆಗುಂಡಿಗಳು:ಮೈಸೂರು ನಗರದಲ್ಲಿರುವ ರಸ್ತೆಗುಂಡಿಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತರಲಾಗಿದೆ. ಅವರು ಇಲ್ಲಿಗೆ ಬಂದು ಸಭೆ ನಡೆಸುವ ವೇಳೆ ಮತ್ತೊಮ್ಮೆ ಪ್ರಸ್ತಾಪಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT