ಮೈಸೂರು: ಗುತ್ತಿಗೆ ಏಜೆನ್ಸಿಗಳು ಗುತ್ತಿಗೆ ನೌಕರರ ಮೇಲೆ ದೌರ್ಜನ್ಯ ಎಸಗುತ್ತಿವೆ. ಗುತ್ತಿಗೆ ನೌಕರರ ಹಿತರಕ್ಷಣೆಗೆ ಸರ್ಕಾರ ಬರಬೇಕು ಎಂದು ಆಗ್ರಹಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು ಹೊರಗುತ್ತಿಗೆ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಾರ್ಮಿಕರು ಇಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಮುಂದೆ ಸೇರಿ ಘೋಷಣೆಗಳನ್ನು ಕೂಗಿದರು.
ನ್ಯಾಯವಾಗಿ ದಕ್ಕಬೇಕಾದ ಸೌಲಭ್ಯ ಕೇಳಿದರೆ ಕೆಲಸದಿಂದ ತೆಗೆದು ಹಾಕುವ ಬೆದರಿಕೆ ಹಾಕುತ್ತಾರೆ. ಕಾಲಕ್ಕೆ ಸರಿಯಾಗಿ ವೇತನ ನೀಡುವುದಿಲ್ಲ. ಕಳೆದ ಮೂರು ತಿಂಗಳುಗಳಿಂದ ವೇತನ ನೀಡಿಲ್ಲ. ಹೀಗಾದರೆ, ಜೀವನ ನಿರ್ವಹಣೆ ಹೇಗೆ ಮಾಡುವುದು ಎಂದು ಅವರು ಪ್ರಶ್ನಿಸಿದರು.
ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ರಾಜ್ಯ ಸರ್ಕಾರಿ ಆಸ್ಪತ್ರೆಗಳ ನಾನ್ ಕ್ಲಿನಿಕಲ್ ಹಾಗೂ ಡಿ.ದರ್ಜೆ ನೌಕರರಿಗೆ ಪರಿಷ್ಕೃತ ವೇತನ ಜಾರಿಗೊಳಿಸಬೇಕು ಎಂದು ಅವರು ಆಗ್ರಹಿಸಿದರು.
ರಾಜ್ಯ ಕಾರ್ಮಿಕ ಇಲಾಖೆಯು ನೌಕರರಿಗೆ ಪರಿಷ್ಕೃತ ವೇತನ ನೀಡಬೇಕು ಎಂದು ಎರಡು ವರ್ಷಗಳ ಹಿಂದೆಯೇ ಆದೇಶ ಹೊರಡಿಸಿತ್ತು. ಆದರೆ, ಇಲ್ಲಿಯವರೆಗೂ ಗುತ್ತಿಗೆದಾರರು ಈ ಆದೇಶವನ್ನು ಜಾರಿಗೊಳಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.